ಚಿತ್ರದುರ್ಗ: ಸತತ ಬರದಿಂದ ಕಂಗಾಲಾಗಿದ್ದ ರೈತರು ಇದೀಗ ಕೊರೊನಾ ಹರಡದಂತೆ ದಿಢೀರ್ ಆದಂತಹ ಭಾರತ ಲಾಕ್ ಡೌನ್ ನಿಂದಾಗಿ ತಾವು ಬೆಳೆದ ಹಣ್ಣು, ತರಕಾರಿಗಳನ್ನು ಮಾರಾಟ ಮಾಡಲಾಗದೆ ಜಮೀನಿನಲ್ಲೇ ಕೊಳೆತು ಹೋಗುವ ಮೂಲಕ ಮತ್ತಷ್ಟು ಸಂಕಷ್ಟಕ್ಕೆ ಈಡಾಗಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿತ್ತು. ಈ ಸುದ್ದಿಯನ್ನು ವೀಕ್ಷಿಸಿರುವ ಜಿಲ್ಲಾಧಿಕಾರಿ ವಿನೋತ್ ಪ್ರಿಯ, ಜಿಲ್ಲೆಯ ಎಲ್ಲ ತಾಲೂಕು ವ್ಯಾಪ್ತಿಯಲ್ಲಿ ಬರುವ ರೈತರು ತಾವು ಬೆಳೆದ ತೋಟಗಾರಿಕಾ ಉನ್ನಗಳಾದ ಹಣ್ಣು ಮತ್ತು ತರಕಾರಿಗಳನ್ನು ಸರಬರಾಜು ಮಾಡಲು ಲಾಕ್ಡೌನ್ ಆದೇಶದಿಂದ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಬಾರಿ ಅತಿ ಕಡಿಮೆ ಅವಧಿ ಅಂದರೆ ಕೇವಲ 60 ದಿನಗಳಲ್ಲಿ ಬೆಳೆ ಕೈಗೆ ಬರುವ ಬೆಳೆ ಅಂತ ಬಿತ್ತನೆ ಮಾಡಿದ್ದರು. ಅದರಲ್ಲೂ ಯುಗಾದಿ, ರಾಮನವಾಮಿ ಹಾಗೂ ಜಾತ್ರೆಗಳ ಸೀಸನ್ ಇರೋದ್ರಿಂದ ಉತ್ತಮ ಬೆಲೆ ಸಿಗುತ್ತದೆ ಎಂಬ ನಿಟ್ಟಿನಲ್ಲಿ ಅಪಾರ ಲಾಭದ ನಿರೀಕ್ಷೆಯಲ್ಲಿ ಅನ್ನದಾತರು ಇದ್ದರು. ಆದರೆ ಕೊರೊನಾ ವೈರಸ್ ಅವರ ಆಸೆಗೆ ತಣ್ಣೀರೆರಚಿದೆ ಅಂತ ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿದ ಬಳಿಕ ಅನ್ನದಾತರ ಸಂಕಷ್ಟ ಅರಿತ ಜಿಲ್ಲಾಡಳಿತ ಉತ್ತಮ ನಿರ್ಧಾರ ಕೈಗೊಂಡಿದೆ.
ಜಿಲ್ಲೆಯ ಎಲ್ಲ ತಾಲೂಕುಗಳ ರೈತರು ತಾವು ಬೆಳೆದ ಅಥವಾ ದಾಸ್ತಾನು ಮಾಡಿಕೊಂಡಿರುವ ಹಣ್ಣು ಮತ್ತು ತರಕಾರಿಗಳನ್ನು ಆಯಾ ಮಾರುಕಟ್ಟೆಗೆ, ಹೊರ ಜಿಲ್ಲೆಗಳಿಗೆ ಮತ್ತು ಹೊರ ರಾಜ್ಯಗಳಿಗೆ ಸಾಗಿಸಲು ಅನುಮತಿ ನೀಡಲಾಗಿದೆ. ಜಿಲ್ಲೆಯ ತೋಟಗಾರಿಕೆ ಬೆಳೆಗಾರರು ತಮ್ಮ ಉತ್ಪನ್ನಗಳನ್ನು ಸಗಟು ವ್ಯಾಪಾರಿಗಳು ಖರೀದಿಸಿ ಮಾರಾಟ ಮಾಡಲು ಕೂಡ ಅನುಮತಿ ನೀಡಲಾಗಿದೆ. ಸಗಟು ವ್ಯಾಪಾರಿಗಳು ತೋಟಗಾರಿಕೆಗೆ ಸಂಬಂಧಿಸಿದ ಕೂಲಿಕಾರರಿಗೆ ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಜರ್ ಗಳನ್ನು ಒದಗಿಸಬೇಕು. ಮತ್ತು ಕಡ್ಡಾಯವಾಗಿ ಇವುಗಳನ್ನು ಉಪಯೋಗಿಸುವ ಮೂಲಕ ಕೋವಿಡ್-19 ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಮಾರಾಟ ವ್ಯವಹಾರ ನಡೆಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.




