– ವೀರ ಯೋಧರಿಂದ ಮೂವರು ಉಗ್ರರು ಮಟಾಷ್
ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ 40 ಯೋಧರ ಸಾವಿಗೆ ಕಾರಣವಾದ ಮಾಸ್ಟರ್ ಮೈಂಡ್ ಉಗ್ರ ಎನ್ ಕೌಂಟರ್ ನಲ್ಲಿ ಸಾವನ್ನಪ್ಪಿದ್ದಾನೆ.
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಭರ್ಜರಿ ಭೇಟಿಯಾಡಿದ್ದಾರೆ. ಜೈಶ್-ಇ-ಮೊಹಮ್ಮದ್ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಮುದಾಸೀರ್ ಅಹ್ಮದ್ ಖಾನ್ ಅಲಿಯಾಸ್ ಮೋದ್ ಭಾಯ್, ಸೇರಿದಂತೆ ಮೂವರು ಉಗ್ರರು ಮೃತಪಟ್ಟಿದ್ದಾರೆ. ಇವರೆಲ್ಲರೂ ದಕ್ಷಿಣ ಕಾಶ್ಮೀರದ ಥ್ರಾಲ್ ನಲ್ಲಿ ಮಧ್ಯರಾತ್ರಿಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಸಾವನ್ನಪ್ಪಿರುವುದಾಗಿ ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ.
ಈ ಮೂಲಕ ಭಾರತೀಯ ಸೇನೆ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪಿಂಗ್ಲಿಷ್ ಗ್ರಾಮದ ಬಳಿ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದು, ಮೂಲಗಳ ಪ್ರಕಾರ ಉಗ್ರರ ಶವಗಳ ಗುರುತು ಪತ್ತೆ ಹಚ್ಚಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.
40 ಯೋಧರು ಹುತಾತ್ಮ:
ಫೇ. 14ರ ಪ್ರೇಮಿಗಳ ದಿನವಾದ ಗುರುವಾರ ಬೆಳಗ್ಗೆ 3.30ಕ್ಕೆ ಜಮ್ಮುವಿನಿಂದ ಶ್ರೀನಗರಕ್ಕೆ 78 ಸಿಆರ್ಪಿಎಫ್ ವಾಹನಗಳಲ್ಲಿ 2,547 ಯೋಧರು ಪ್ರಯಾಣಿಸುತ್ತಿದ್ದರು. ಶ್ರೀನಗರಕ್ಕೆ 20 ಕಿ.ಮೀ ದೂರದಲ್ಲಿದ್ದಾಗ 350 ಕೆಜಿ ಸುಧಾರಿತ ಸ್ಫೋಟಕಗಳನ್ನು ತುಂಬಿದ್ದ ಬಿಳಿ ಬಣ್ಣದ ಸ್ಕಾರ್ಪಿಯೋ ಕಾರನ್ನು ಉಗ್ರನೊಬ್ಬ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದನು. ಡಿಕ್ಕಿ ಹೊಡೆದ ರಭಸಕ್ಕೆ ಸ್ಫೋಟಕಗಳು ಸ್ಫೋಟಗೊಂಡ ಪರಿಣಾಮ 40 ಮಂದಿ ಸೈನಿಕರು ವೀರ ಮರಣವನ್ನು ಅಪ್ಪಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv