ಹುಬ್ಬಳ್ಳಿ: ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಹೊರಬಂದಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಯುದ್ಧ ಗೆದ್ದು ಬಂದವರಂತೆ ವರ್ತಿಸುತ್ತಿದ್ದಾರೆ. ಅವರಿಗೆ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ನೀಡಿರುವುದು ಸರಿ ಅಲ್ಲ ಎಂದು ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಯುದ್ಧ ಗೆದ್ದು ಬಂದವರಂತೆ ವರ್ತಿಸುತ್ತಿದ್ದಾರೆ. ಪ್ರಕರಣ ಇನ್ನೂ ನ್ಯಾಯಾಲಯದಲ್ಲಿ ಇರುವಾಗ ಈ ರೀತಿಯ ವರ್ತನೆ ಸರಿಯಲ್ಲ. ಅವರಿಗೆ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ನೀಡಿರುವುದು ಸರಿಯಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ:ಇದು ಕೇವಲ ಆರಂಭ ಅಷ್ಟೇ, ಅಂತ್ಯ ಅಲ್ಲ: ಗುಡುಗಿದ ಕನಕಪುರ ಬಂಡೆ
ಹಾಗೆಯೇ ಅನರ್ಹ ಶಾಸಕರ ಬಗ್ಗೆ ಮಾತನಾಡಿ, ಅನರ್ಹಗೊಂಡ ಶಾಸಕರಿಗೆ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡುವ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ. ಆದರೆ ಯಾರ ಕಾರಣದಿಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ ಎಂಬುದು ಪಕ್ಷದ ಕಾರ್ಯಕರ್ತರಿಗೆ ಗೊತ್ತಿದೆ. ಅನರ್ಹಗೊಂಡ ಶಾಸಕರ ಬಗ್ಗೆ ಸುಪ್ರೀಂ ಕೋರ್ಟ್ ಇನ್ನೂ ಅಂತಿಮ ತೀರ್ಪು ನೀಡುವುದು ಬಾಕಿಯಿದೆ. ತೀರ್ಪು ಪ್ರಕಟಗೊಂಡ ನಂತರ ಬಿಜೆಪಿ ಟಿಕೆಟ್ ಅಂತಿಮಗೊಳಿಸಲಾಗುವುದು. ಹಾಗೆಯೇ ಅನರ್ಹರೆಲ್ಲಾ ಬಿಜೆಪಿ ಸೇರಿಲ್ಲ ಎಂದು ತಿಳಿಸಿದರು.
ನೆರೆ ಪರಿಹಾರದ ಬಗ್ಗೆ ಮಾತನಾಡಿ, ನೆರೆ ಸಂತ್ರಸ್ತರಿಗೆ ಈಗಾಗಲೇ ಪರಿಹಾರ ನೀಡಲಾಗುತ್ತಿದೆ. ಪರಿಹಾರ ನೀಡಲು ಆರ್ಥಿಕ ಕೊರತೆ ಇಲ್ಲ. ಮನೆ ಬಿದ್ದವರಿಗೆ 5 ಲಕ್ಷ ರೂ. ಹಾಗೂ 30/40 ನಿವೇಶನ ಉಚಿತವಾಗಿ ನೀಡಲಾಗುತ್ತದೆ ಎಂದು ಆರ್. ಅಶೋಕ್ ಪ್ರತಿಕ್ರಿಯಿಸಿದರು.