ರಾಯಚೂರು: ಮಳೆಯಿಂದ ಜಿಲ್ಲೆಯ ನಾರಾಯಣಪುರ ಡ್ಯಾಂ ಸಂಪೂರ್ಣ ಭರ್ತಿಯಾಗಿದ್ದು, ಕೃಷ್ಣನದಿಯ ಅಕ್ಕಪಕ್ಕದಲ್ಲಿರುವ ಗ್ರಾಮಗಳಿಗೆ ಪ್ರವಾಹ ಭೀತಿ ಕಾಡುತ್ತಿದೆ.
ನಾರಾಯಣಪುರ ಡ್ಯಾಂ ಸಂಪೂರ್ಣ ಭರ್ತಿಯಾದ ಕಾರಣ ಕೃಷ್ಣನದಿಗೆ 50 ಸಾವಿರ ಕ್ಯೂಸೆಕ್ ನೀರು ಹರಿಸಲಾಗಿದೆ. ಸಂಜೆ 4 ಗಂಟೆ ವೇಳೆಗೆ ಒಂದು ಲಕ್ಷ ಕ್ಯೂಸೆಕ್ ನೀರು ಬಿಡುವ ಸಾಧ್ಯತೆ ಇದ್ದು, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯ ಕೃಷ್ಣಾ ನದಿ ಅಕ್ಕಪಕ್ಕದ ಗ್ರಾಮದ ಗ್ರಾಮಸ್ಥರು ಎಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ.
ಸುರಪುರ ತಾಲೂಕಿನ ನೀಲಕಂಠರಾಯನ ಗಡ್ಡಿ ಗ್ರಾಮ ನಡುಗಡ್ಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು, ತಾಲೂಕು ಆಡಳಿತ ಮತ್ತು ಗ್ರಾಮ ಪಂಚಾಯತ್ ಅಧಿಕಾರಿಗಳು ಸುರಕ್ಷತಾ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ. ಇದರ ಜೊತೆಗೆ ಕೃಷ್ಣಾ ನದಿಗೆ ಇಳಿಯದಂತೆ ಗ್ರಾಮಸ್ಥರಿಗೆ ಸೂಚನೆ ನೀಡಲಾಗಿದೆ.