ರಾಯಚೂರು: ಗುರು ರಾಯರ ಸನ್ನಿಧಿ ಮಂತ್ರಾಲಯದಲ್ಲಿ ಕಳೆದ ಆರು ದಿನಗಳಿಂದ ನಡೆಯುತ್ತಿರುವ ರಾಯರ ಗುರು ವೈಭವೋತ್ಸವದ ಸಂಭ್ರಮಕ್ಕೆ ಇಂದು ವಿದ್ಯುಕ್ತ ತೆರೆ ಬೀಳಲಿದೆ. ಗುರು ರಾಘವೇಂದ್ರ ಸ್ವಾಮಿಯ 399ನೇ ಪಟ್ಟಾಭಿಷೇಕ ಹಾಗೂ 425ನೇ ವರ್ಧಂತಿ ಉತ್ಸವ ಅಂಗವಾಗಿ ಆಚರಣೆಗೆ ಬಂದಿರುವ ಗುರು ವೈಭವೋತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಇಂದು ರಾಯರ 425ನೇ ಹುಟ್ಟುಹಬ್ಬವಾಗಿದ್ದು, ರಾಯರ ಜನ್ಮದಿನವನ್ನ ಭಕ್ತರು ಸಂಭ್ರಮ ಸಡಗರದಿಂದ ಆಚರಿಸುತ್ತಿದ್ದಾರೆ.
ಫೆಬ್ರವರಿ 25 ರಂದು ರಾಯರ 399ನೇ ಪಟ್ಟಾಭಿಷೇಕ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತು. ರಾಯರ ಪಟ್ಟಾಭಿಷೇಕ ಹಾಗೂ ವರ್ಧಂತಿ ಉತ್ಸವ ಹಿನ್ನೆಲೆ ಮಂತ್ರಾಲಯದಲ್ಲಿ ಏಳು ದಿನ ಕಾಲ ಗುರು ವೈಭವೋತ್ಸವವನ್ನು ಆಚರಿಸಲಾಗುತ್ತಿದೆ. ಈ ಏಳು ದಿನ ಕಾಲ ಬೆಳಗ್ಗೆಯಿಂದಲೇ ಸುಪ್ರಭಾತ, ನಿರ್ಮಾಲ್ಯ ವಿಸರ್ಜನೆ, ಮೂಲ ರಾಮದೇವರ ಪೂಜೆ ನಡೆಯುತ್ತವೆ. ಇಂದು ರಾಯರ ಪಾದುಕೆಗಳನ್ನು ನವರತ್ನಖಚಿತ ರಥದಲ್ಲಿಟ್ಟು ಮೆರವಣಿಗೆ ಮಾಡಲಾಯಿತು. ಹಿಂದಿನಿಂದ ಬಂದ ಪರಂಪರೆಯನ್ನು ಮಠದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತಿದೆ. ಮೆರವಣಿಗೆ ಬಳಿಕ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಭಕ್ತರಿಗೆ ಆಶಿರ್ವಚನ ನೀಡಿದರು.
ಪ್ರತೀ ಬಾರಿಯಂತೆ ಈ ಬಾರಿಯೂ ವರ್ಧಂತಿ ಉತ್ಸವಕ್ಕೆ ವಿಶೇಷವಾಗಿ ತಿರುಪತಿ ತಿರುಮಲ ದೇವಾಲಯದಿಂದ ರಾಯರಿಗೆ ಶೇಷವಸ್ತ್ರಗಳ ಸಮರ್ಪಣೆ ನಡೆಯಿತು. ತಮಿಳುನಾಡಿನ ಚೆನೈನ ನಾದಹಾರ ಸೇವಾ ಟ್ರಸ್ಟ್ ನ 400 ಕ್ಕೂ ಹೆಚ್ಚು ಕಲಾವಿದರು ಒಟ್ಟಿಗೆ ಹಾಡುವ ಮೂಲಕ ನಾದಸೇವೆಯನ್ನು ಮಾಡಿದರು. ಕಳೆದ 16 ವರ್ಷಗಳಿಂದ ನಾದಹಾರ ಸೇವೆಯನ್ನು ಈ ಭಕ್ತರು ನೆರವೇರಿಸತ್ತಾ ಬಂದಿದ್ದಾರೆ. ದೇಶದ ಮೂಲೆ ಮೂಲೆಯಿಂದ ಬಂದ ಭಕ್ತರು ಭಾವಪರವಶರಾಗಿದ್ದರು.
ಗುರು ವೈಭವೋತ್ಸವ ಹಿನ್ನೆಲೆ ಮಠದಲ್ಲಿ ಪ್ರತಿದಿನ ಸಾಯಂಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆ ಪ್ರವಚನ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನ ಮಾಡಲಾಗುತ್ತದೆ. ಇಂದು ಉತ್ಸವಕ್ಕೆ ತೆರೆಬೀಳಲಿದ್ದು, ನಾನಾ ರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ಮಠಕ್ಕೆ ಆಗಮಿಸಿದ ಭಕ್ತರು ಗುರುವೈಭವೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾಗಿದ್ದಾರೆ.