ರಾಯಚೂರು: ಜಿಲ್ಲೆಯಲ್ಲಿ ಶಾಲಾ ವಾಹನಗಳಿಗೆ ಯಾವುದೇ ರೂಲ್ಸ್ ರೆಗ್ಯುಲೇಷನ್ಸ್ ಇಲ್ಲದಂತಾಗಿದೆ. ಸಾರಿಗೆ ನಿಯಮಗಳನ್ನು ಉಲ್ಲಂಘಿಸಿ ಶಾಲಾ ವಾಹನಗಳಲ್ಲಿ ಮಕ್ಕಳನ್ನು ಅಪಾಯದಲ್ಲಿ ಕರೆದೊಯ್ಯುತ್ತಿದ್ದಾರೆ.
ಜಿಲ್ಲೆಯ ಮಾನವಿ ಪಟ್ಟಣದ ಎಸ್ಯುಪಿಎಂ ಮೌಂಟೆಸ್ಸರಿ ಇಂಗ್ಲಿಷ್ ಮಾಧ್ಯಮ ಶಾಲೆ ಮಕ್ಕಳನ್ನು ಅಪಾಯದಲ್ಲಿ ಶಾಲಾ ವಾಹನದಲ್ಲಿ ಕರೆದೊಯ್ಯುತ್ತಿರುವ ದೃಶ್ಯ ಸಾರ್ವಜನಿಕರ ಮೊಬೈಲ್ ನಲ್ಲಿ ಸೆರೆಯಾಗಿದೆ. ಪ್ರಾಣಿಗಳಂತೆ ಮಕ್ಕಳನ್ನು ವಾಹನದಲ್ಲಿ ತುಂಬಿದ್ದಲ್ಲದೇ, ವಾಹನದ ಹೊರಭಾಗದ ಫುಟ್ ಸ್ಟ್ಯಾಂಡ್ ಮೇಲೆ ವಿದ್ಯಾರ್ಥಿಯನ್ನು ನಿಲ್ಲಿಸಿಕೊಂಡು ಕರೆದೊಯ್ಯಲಾಗಿದೆ.
ಸಾರಿಗೆ ನಿಯಮಗಳನ್ನು ಉಲ್ಲಂಘಿಸಿ ಶಾಲಾ ಆಡಳಿತ ಮಂಡಳಿ ಮಕ್ಕಳ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಕ್ಕಳ ಸುರಕ್ಷತೆ ಬಗ್ಗೆ ಗಮನ ಹರಿಸಬೇಕಾದ ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆ ಹಾಗೂ ಪೊಲೀಸರು ಕಣ್ಮುಚ್ಚಿ ಕುಳಿತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಇನ್ನಾದ್ರೂ ಅಧಿಕಾರಿಗಳು ಎಚ್ಚೆತ್ತು ಇಂತಹ ಶಾಲಾ ಆಡಳಿತ ಮಂಡಳಿ ವಿರುದ್ದ ಕಠಿಣ ಕ್ರಮ ಕೈಗೊಂಡು ಸಂಭವಿಸಬಹುದಾದ ಅನಾಹುತಗಳನ್ನು ತಪ್ಪಿಸಬೇಕಿದೆ. ಶಾಲಾ ವಾಹನ ಹಾಗೂ ಆಟೋಗಳಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸುವ ಪೋಷಕರು ಸಹ ಎಚ್ಚೆತ್ತುಕೊಳ್ಳಬೇಕಿದೆ.