ರಾಯಚೂರು: ಸ್ವಿಫ್ಟ್ ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಿಂಧನೂರು ತಾಲೂಕಿನ ಮಣ್ಣಿಕೆರೆ ಬಳಿ ನಡೆದಿದೆ.
ತೆಲಂಗಾಣದ ಗದ್ವಾಲ್ ಮೂಲದ ಗೋಪಾಲ (28) ಹಾಗೂ ಲಕ್ಷ್ಮಣ (30) ಮೃತ ದುರ್ದೈವಿಗಳು. ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ರಾಯಚೂರಿನ ರಿಮ್ಸ್ಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬೆಂಗಳೂರಿನಿಂದ ರಾಯಚೂರು ಕಡೆಗೆ ಬರುತ್ತಿದ್ದ ವೇಳೆ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಆರೋಗ್ಯ ಸಮಸ್ಯೆ ಹಿನ್ನೆಲೆ ಅನುಮತಿ ಪಡೆದು ಬೆಂಗಳೂರಿಗೆ ತೆರಳಿದ್ದವರು ವಾಪಸ್ ಬರುವ ವೇಳೆ ಅಪಘಾತ ನಡೆದಿದೆ.
ರಸ್ತೆಯಲ್ಲಿ ಹೋಗುತ್ತಿದ್ದ ಕೆಲವರು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದವನ್ನು ರಕ್ಷಿಸಿ ಅಂಬುಲೆನ್ಸ್ ಹಾಗೂ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಗಾಯಾಳುಗಳನ್ನು ಸಿಂಧನೂರು ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆ ಅಗತ್ಯವಾಗಿದ್ದರಿಂದ ಅವರನ್ನು ರಿಮ್ಸ್ಗೆ ದಾಖಲಿಸಲಾಗಿದೆ.
ಮೃತರು ತೆಲಂಗಾಣದ ಗದ್ವಾಲ್ ಮೂಲದವರಾಗಿದ್ದು, ರಾಯಚೂರು ಮೂಲಕ ಗದ್ವಾಲ್ಗೆ ತೆರಳುತ್ತಿದ್ದರು. ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಬಳಗಾನೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.