ರಾಯಚೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರಿಗೆ ಈಗ ಜ್ಞಾನೋದಯವಾಗಿದೆ. ಅದಕ್ಕೆ ರಾಜ್ಯದಲ್ಲಿ ಬರ ಪ್ರವಾಸ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ ವ್ಯಂಗ್ಯವಾಡಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಒಂದು ವರ್ಷ ಸಿಎಂ ಆಗುವುದರಲ್ಲೆ ಯಡಿಯೂರಪ್ಪ ಕಾಲ ಕಳೆದರು. ಈಗ ಅವರಿಗೆ ಜ್ಞಾನೋದಯವಾಗಿದೆ. ಅದಕ್ಕೆ ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡುವ ಕಡೆ ಪ್ರವಾಸ ಮಾಡುತ್ತಿದ್ದಾರೆ. ಯಡಿಯೂರಪ್ಪರಿಗೆ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. 15 ಸಾವಿರ ಕೋಟಿ ಕೇಂದ್ರದಿಂದ ಬಂದಿಲ್ಲ ಅನ್ನೋದು ಅವರಿಗೆ ಗೊತ್ತಿಲ್ವಾ? ಹಣ ಬಿಡುಗಡೆ ಮಾಡಲು ಆಗದ ಕೇಂದ್ರ ಸರ್ಕಾರ ದಿವಾಳಿಯಾಗಿದೆಯಾ ಎಂದು ಪ್ರಶ್ನೆ ಮಾಡಿದರು.
ಇದೇ ವೇಳೆ ರಾಯಚೂರು ವಿವಿ ಹಾಗೂ ಐಐಐಟಿ ಈ ವರ್ಷ ಆರಂಭವಾಗಲಿದೆ. ಐಐಐಟಿಗೆ 30 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿ ಬೇರೆಡೆ ವಿದ್ಯಾಭ್ಯಾಸಕ್ಕೆ ವ್ಯವಸ್ಥೆ ಮಾಡಲಾಗುವುದು. ನಗರದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಐಐಐಟಿ ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.
ಸಿಎಂ ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯದ ಬಗ್ಗೆ ಮಾತನಾಡಿದ ಅವರು, ಗ್ರಾಮ ವಾಸ್ತವ್ಯ ಮಾಡುವ ಗ್ರಾಮವನ್ನು ನಾಳೆ ಅಂತಿಮ ಮಾಡುತ್ತೇವೆ. ಮಾನ್ವಿ ತಾಲೂಕಿನ ಗ್ರಾಮವೊಂದರಲ್ಲಿ ಜೂನ್ 28 ರಂದು ಸಿಎಂ ವಾಸ್ತವ್ಯ ಮಾಡಲಿದ್ದಾರೆ ಎಂದು ಹೇಳಿದರು.