ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈಗಾಗಲೇ ಅಕ್ಟೋಬರ್ 6ಕ್ಕೆ ಮುಂಗಾರು ಅಂತ್ಯವಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಇನ್ನೂ ಅಕ್ಟೋಬರ್ 10ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಅಕ್ಟೋಬರ್ 10ರ ತನಕ ಮಳೆ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಿದೆ. ನೈರುತ್ಯ ಬಂಗಾಳ ಕೊಲ್ಲಿಯಿಂದ ಪೂರ್ವ ಮಧ್ಯ ಅರೇಬಿಯನ್ ಸಮುದ್ರದವರೆಗೆ ಹಾಗೂ ತಮಿಳುನಾಡು ಮತ್ತು ಕರ್ನಾಟಕದಾದ್ಯಂತ ಒಂದು ಮುಂಗಾರು ವಿಸ್ತರಿಸಿದ್ದು, ಇದು ರಾಜ್ಯದಲ್ಲಿ ಮಳೆಗೆ ಕಾರಣವಾಗಿದೆ. ಇದನ್ನೂ ಓದಿ: ಫ್ಯಾಬ್ರಿಕ್ ಗೋಡೌನ್ನಲ್ಲಿ ಬೆಂಕಿ – ಸ್ಥಳಕ್ಕೆ ಆಗಮಿಸಿದ 18 ಅಗ್ನಿ ಶಾಮಕ ವಾಹನ
ಶುಕ್ರವಾರ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗಿನಲ್ಲಿ ಮಳೆ ಹೆಚ್ಚಾಗುವ ಸೂಚನೆ ಇದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಉತ್ತರ ಒಳನಾಡಿನ ಜಿಲ್ಲೆಗಳಾದ ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಸಹ ಹೆಚ್ಚಿನ ಮಳೆ ನಿರೀಕ್ಷೆ ಇದೆ.
ಕಳೆದ 24 ಗಂಟೆಗಳಲ್ಲಿ, ಗೋವಾ ಮತ್ತು ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗಿದೆ. ಕರಾವಳಿಯ ತಮಿಳುನಾಡು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಸಿಕ್ಕಿಂನಲ್ಲಿ ಸಾಧಾರಣ ಮಳೆಯಾಗಿದೆ ಎಂದು ಇಲಾಖೆ ತಿಳಿಸಿದೆ. ಇದನ್ನೂ ಓದಿ: ಮನೆ ಮೇಲೆ ಕಲ್ಲು ತೂರಿರುವುದು ರಾಜಕೀಯ ಪ್ರೇರಿತವಲ್ಲ: ಪುಟ್ಟರಾಜು ಸ್ಪಷ್ಟನೆ
ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ, ಕೊಂಕಣ ಮತ್ತು ಗೋವಾ ಮತ್ತು ವಿದರ್ಭ ಮತ್ತು ಕರಾವಳಿ ಆಂಧ್ರಪ್ರದೇಶದ ಕೆಲ ಭಾಗಗಳಲ್ಲಿ ಸಾಧಾರಣ ಮಳೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.