ಹಾವೇರಿ: ಜಿಲ್ಲೆಯಲ್ಲಿ ರಾತ್ರಿಯಿಡಿ ಧಾರಾಕಾರ ಮಳೆ ಸುರಿದಿದೆ. ಮಳೆಗೆ ಹಾವೇರಿ ತಾಲೂಕಿನ ಅಗಡಿ ಗ್ರಾಮದ ಬಳಿ ಇರುವ ಹಳ್ಳ ತುಂಬಿ ಹರಿಯುತ್ತಿದ್ದು, ಹಳ್ಳದಲ್ಲಿ ತೇಲಿ ಹೋಗುತ್ತಿದ್ದ ಮೂವರನ್ನು ರಕ್ಷಣೆ ಮಾಡಲಾಗಿದೆ.
ಹಳ್ಳದ ನೀರು ಹಾವೇರಿ-ಗುತ್ತಲ ರಸ್ತೆ ಮೇಲೆ ಹರಿಯುತ್ತಿರುವುದರಿಂದ ಬೈಕಿನಲ್ಲಿ ಹಳ್ಳ ದಾಟುತ್ತಿದ್ದ ಮೂವರು ನೀರಿನ ರಭಸಕ್ಕೆ ತೇಲಿ ಹೋಗುತ್ತಿದ್ದರು. ಈ ವಿಷಯ ತಿಳಿದು ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಇಬ್ಬರು ಮಹಿಳೆಯರು ಮತ್ತು ಓರ್ವ ಪುರುಷನನ್ನು ರಕ್ಷಿಸಿದ್ದಾರೆ.
ಮತ್ತೊಂದೆಡೆ ಜಿಲ್ಲೆಯ ರಾಣೇಬೆನ್ನೂರು ನಗರದ ದೊಡ್ಡ ಕೆರೆ, ರಾಣೇಬೆನ್ನೂರು ತಾಲೂಕಿನ ಅಸುಂಡಿ ಕೆರೆ, ಯಕಲಾಸಪುರ ಕೆರೆ ಸೇರಿದಂತೆ ಜಿಲ್ಲೆಯ ಬಹುತೇಕ ಕೆರೆ, ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿದೆ. ಸಾಕಷ್ಟು ಪ್ರಮಾಣದ ನೀರು ರೈತರ ಜಮೀನುಗಳಿಗೆ ನುಗ್ಗಿದೆ. ಅಲ್ಲದೆ ತಗ್ಗು ಪ್ರದೇಶದಲ್ಲಿನ ಮನೆಗಳಿಗೂ ನೀರು ನುಗ್ಗಿದ್ದು, ಜಿಲ್ಲೆಯ ಜನರು ವರುಣನ ಆರ್ಭಟಕ್ಕೆ ಹೈರಾಣಾಗಿದ್ದಾರೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಜಿಲ್ಲೆಯಲ್ಲಿ ರಾತ್ರಿಯಿಡಿ ಧಾರಾಕಾರ ಮಳೆ ಸುರಿದಿದ್ದರಿಂದ ಜಿಲ್ಲೆಯ ಬಹುತೇಕ ಕೆರೆ, ಹಳ್ಳ, ಕೊಳ್ಳಗಳು ತುಂಬಿ ಹರಿತಿವೆ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಯಲವಗಿ ಗ್ರಾಮದ ಬಳಿ ಇರುವ ರೈಲ್ವೆ ಅಂಡರ್ ಬ್ರಿಡ್ಜ್ ನಲ್ಲಿ ಭಾರೀ ಪ್ರಮಾಣದ ನೀರು ತುಂಬಿಕೊಂಡಿದೆ. ಅಂಡರ್ ಬ್ರಿಡ್ಜ್ ನಲ್ಲಿ ನೀರು ತುಂಬಿದ್ದರಿಂದ 42 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ಸಿಲುಕಿ ಒದ್ದಾಡಿದ ಘಟನೆ ನಡೆದಿದೆ.
ಈ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಬಸ್ಸಿನಲ್ಲಿದ್ದ 42 ಜನರನ್ನ ರಕ್ಷಿಸಿದ್ದಾರೆ. ಬಸ್ ಬದಾಮಿಯಿಂದ ಬೆಂಗಳೂರಿನತ್ತ ತೆರಳುತ್ತಿತ್ತು ಎನ್ನಲಾಗಿದೆ. ಇದರಿಂದ ದುರಂತವೊಂದು ತಪ್ಪಿದಂತಾಗಿದೆ.