ಬೆಂಗಳೂರು: ಹಿರಿಯ ಮುಖಂಡ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ತಪ್ಪಿದ್ದಕ್ಕೆ ಬೆಂಗಳೂರಿನ ಕಾಂಗ್ರೆಸ್ ನಾಯಕರು ಹಿರಿಯ ಕೈ ಮುಖಂಡರ ವಿರುದ್ಧ ತೀವ್ರ ಆಕ್ರೋಶವನ್ನು ಹೊರ ಹಾಕಿದ್ದಾರೆ.
ಪಕ್ಷಕ್ಕಾಗಿ ದುಡಿದು ಉತ್ತಮ ಕೆಲಸ ಮಾಡಿದ್ದರೂ ಸಚಿವ ಸ್ಥಾನ ನೀಡದೇ ವಂಚಿಸಿದ್ದಾರೆ. ಹಿರಿತನಕ್ಕೆ ಪಕ್ಷದಲ್ಲಿ ಬೆಲೆ ಇಲ್ಲ. ಹೀಗಾಗಿ ರಾಮಲಿಂಗಾರೆಡ್ಡಿ ಅವರನ್ನು ಬೆಂಬಲಿಸಿ ರಾಜೀನಾಮೆ ನೀಡಲು ಬಿಬಿಎಂಪಿಯ ಕೆಲ ಪಾಲಿಕೆ ಸದಸ್ಯರು ಮುಂದಾಗಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ಸಿಕ್ಕಿದೆ.
ಜಯನಗರ, ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು, ರೆಡ್ಡಿ ಬೆಂಬಲಿಗರು ಸೇರಿದಂತೆ ಹಲವರು ಮೌರ್ಯ ಹೋಟೆಲ್ನಲ್ಲಿ ಸಭೆ ನಡೆಸುತ್ತಿದ್ದಾರೆ. ಈ ಸಭೆಯಲ್ಲಿ ಮಾಜಿ ಮೇಯರ್ ಮಂಜುನಾಥ ರೆಡ್ಡಿ, ಪಾಲಿಕೆ ಸದಸ್ಯರಾದ ರಿಜ್ವಾನ್ ನವಾಬ್, ಚಂದ್ರಪ್ಪ, ಅನ್ಸರ್ ಪಾಷಾ ಸೇರಿದಂತೆ ಹಲವರು ಸಭೆಯಲ್ಲಿ ಭಾಗಿಯಾಗಿದ್ದಾರೆ.
ಕೈ ನಾಯಕರಿಗೆ ಎಚ್ಚರಿಕೆ:
ಕೆಲಸ ಮಾಡದ ಸಚಿವರನ್ನು ತೆಗೆದುಹಾಕಿ. ಪಕ್ಷಕ್ಕಾಗಿ ಹಗಲಿರುಳು ದುಡಿದ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೊಡಿ. ಸಚಿವ ಸ್ಥಾನ ಸಿಗದೇ ಇದ್ದರೆ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮಾಜಿ ಮೇಯರ್ ಮಂಜುನಾಥ್ ರೆಡ್ಡಿ ರಾಜ್ಯದ ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.
ರೆಡ್ಡಿಗೆ ಗಾಳ?
ಭಾನುವಾರ ಬೆಂಗಳೂರಿನಲ್ಲಿ ರಾಮಲಿಂಗಾರೆಡ್ಡಿ ಜತೆ ಬಿಜೆಪಿ ಇಬ್ಬರು ಶಾಸಕರು ಭೋಜನ ಸವಿದಿದ್ದಾರೆ. ಶಾಸಕರಾದ ಸತೀಶ್ ರೆಡ್ಡಿ, ಕೃಷ್ಣಪ್ಪ ಅವರು ರಹಸ್ಯ ಭೇಟಿ ರಾಮಲಿಂಗಾರೆಡ್ಡಿಗೆ ಸಮಾಧಾನ ಹೇಳಿದ್ದಾರೆ. ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯರೆಡ್ಡಿ ಜತೆಯೂ ಶಾಸಕರಿಬ್ಬರು ಮಾತುಕತೆ ನಡೆಸಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ಸಿಕ್ಕಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv