ರಾಮನಗರ: ಪ್ರವಾಸಿಗರನ್ನು ಕರೆತಂದಿದ್ದ ಬಸ್ಸೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕ್ಷಣಾರ್ಧದಲ್ಲೇ ಬೆಂಕಿಗೆ ಆಹುತಿಯಾಗಿರುವ ಘಟನೆ ರಾಮನಗರ ತಾಲೂಕಿನ ಪಾದರಹಳ್ಳಿ ಸಮೀಪದಲ್ಲಿ ನಡೆದಿದೆ.
ಬೆಂಗಳೂರಿನಿಂದ ಪ್ರವಾಸಿಗರನ್ನು ಕರೆದುಕೊಂಡು ರಾಮನಗರ ತಾಲೂಕಿನ ಪಾದರಹಳ್ಳಿ ಸಮೀಪದಲ್ಲಿನ ಶಿಲ್ಹಾಂದರ ರೆಸಾರ್ಟ್ ಬಳಿ ಖಾಸಗಿ ಒಡೆತನದ ಎಸ್.ಆರ್.ಎಸ್ ಮಾಲೀಕತ್ವದ ಬಸ್ಸಿನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ.
ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಎಚ್ಚೆತ್ತ ಚಾಲಕ ಬಸ್ ನಿಲ್ಲಿಸಿ, ಪ್ರಯಾಣಿಕರನ್ನು ಕೆಳಗಿಳಿಸಿದ್ದಾನೆ. ಬಳಿಕ ಬಸ್ಸಿಗೆ ಸಂಪೂರ್ಣವಾಗಿ ಬೆಂಕಿ ಆವರಿಸಿದ್ದು ಕ್ಷಣಾರ್ಧಲ್ಲಿಯೆ ಬಸ್ ಸುಟ್ಟು ಕರಕಲಾಗಿದೆ.
ಘಟನೆ ನಡೆದ ಸ್ಥಳದ ಸಮೀಪದಲ್ಲಿನ ಶಿಲ್ಹಾಂದರ ರೆಸಾರ್ಟಿಗೆ ಪ್ರವಾಸಿಗರು ಬಂದಿದ್ದರು ಎನ್ನಲಾಗಿದೆ. ಬಸ್ಸಿನಲ್ಲಿ ಸುಮಾರು 30 ಕ್ಕೂ ಹೆಚ್ಚು ಜನರಿದ್ದರು ಎನ್ನಲಾಗಿದೆ. ಚಾಲಕನ ಸಮಯಪ್ರಜ್ಞೆಯಿಂದ ಎಲ್ಲರೂ ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ಸಿಗೆ ಬೆಂಕಿ ಆವರಿಸಿ ಹೊತ್ತಿ ಉರಿಯುತ್ತಿರುವ ಸುದ್ದಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.
ಘಟನೆ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.