ರಾಮನಗರ: ಪಾದರಾಯನಪುರದ ಪುಂಡರನ್ನು ರಾಮನಗರದ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ಇದೀಗ ಇಂದು ಮತ್ತೆ ಮೂವರಿಗೆ ಕೊರೊನಾ ಬಂದಿರುವ ಶಂಕೆ ವ್ಯಕ್ತವಾಗುತ್ತಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
ಈ ಮೂಲಕ ಪಾದರಾಯನಪುರದ 5 ಮಂದಿ ಪುಂಡರಿಗೆ ಕೊರೊನಾ ಬಂದಿದ್ದು, ರಾಮನಗರ ಜೈಲಿಗೆ ಶಿಫ್ಟ್ ಮಾಡಿ ಸರ್ಕಾರ ತಪ್ಪು ಮಾಡಿತ್ತಾ ಅನ್ನೋ ಪ್ರಶ್ನೆ ಎದ್ದಿದೆ.
121 ಆರೋಪಿಗಳನ್ನ ರಾಮನಗರ ಜೈಲಿಗೆ ಶಿಫ್ಟ್ ಮಾಡಿದ್ದು, ಅದರಲ್ಲಿ ಇಬ್ಬರು ಆರೋಪಿಗಳಿಗೆ ಸೋಂಕಿನ ಶಂಕೆ ವ್ಯಕ್ತವಾಗಿತ್ತು. ಹೀಗಾಗಿ ಗುರುವಾರ ತಡರಾತ್ರಿಯೇ ಇಬ್ಬರು ಸೋಂಕಿತ ಆರೋಪಿಗಳನ್ನು ಆರೋಗ್ಯ ಸಿಬ್ಬಂದಿ ಶಿಫ್ಟ್ ಮಾಡಿದ್ದಾರೆ. ಜೈಲಿನಿಂದ ನೇರವಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಸೋಂಕಿತರ ಶಿಫ್ಟ್ ಮಾಡಿದ್ದು, ಆರೋಗ್ಯ ಸಿಬ್ಬಂದಿ ಮತ್ತು ಜಿಲ್ಲಾಡಳಿತ ಜೈಲಿನ ಸುತ್ತಮುತ್ತ ಸೀಲ್ ಡೌನ್ ಮಾಡಿದ್ದಾರೆ. ಇದನ್ನೂ ಓದಿ: ರಾಮನಗರದಲ್ಲಿರುವ ಪಾದರಾಯನಪುರದ ಇಬ್ಬರು ಕೈದಿಗಳಿಗೆ ಕೊರೊನಾ
ರಾಮನಗರ ಜೈಲಿನಲ್ಲಿರುವ ಕೈದಿಗಳಿಗೆ ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಇತ್ತ ಬೆಂಗಳೂರು ಪೊಲೀಸರಿಗೂ ಆತಂಕ ಶುರುವಾಗಿದೆ. ಹೀಗಾಗಿ ಪಾದರಾಯನಪುರ ಗಲ್ಲಿ ಗಲ್ಲಿಗಳಲ್ಲಿ ಆರೋಪಿಗಳನ್ನು ಅಟ್ಟಾಡಿಸಿ ಸೆರೆ ಹಿಡಿದಿದ್ದಾರೆ. ಮೂರು ರಾತ್ರಿ – ಹಗಲು ಕಾರ್ಯಚರಣೆ ನಡೆಸಿ ಸುಮಾರು 135 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬಂಧಿತ ಎಲ್ಲಾ ಆರೋಪಿಗಳನ್ನು ರಾಮನಗರ ಜೈಲಿಗೆ ಬಿಟ್ಟು ಬಂದಿದ್ದರು. ಸದ್ಯ ರಾಮನಗರ ಜೈಲಿನಲ್ಲಿರುವ ಇಬ್ಬರು ಆರೋಪಿಗಳಿಗೆ ಪಾಸಿಟಿವ್ ಬಂದಿದ್ದು, ಇದೀಗ ಮತ್ತೆ ಮೂವರಿಗೆ ಕೊರೊನಾ ಪಾಸಿಟಿವ್ ಇರೋ ಶಂಕೆ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇದೀಗ ಆರೋಪಿಗಳನ್ನು ಬೆಂಗಳೂರಿಗೆ ವಾಪಸ್ ಕರೆ ತರುತ್ತಿದ್ದಾರೆ.