ರಾಮನಗರ: ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಹಿನ್ನೆಲೆ ರಾಮನಗರ ಹಾಗೂ ಚನ್ನಪಟ್ಟಣ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ಒಂದೇ ದಿನ ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್ ರಜೆ ಘೋಷಿಸಿದ್ದಾರೆ. ಇಂದು ನಡೆಯ ಬೇಕಿದ್ದ ತರಗತಿಯನ್ನ ಶನಿವಾರ ಪೂರ್ಣ ದಿನ ನಡೆಸುವುದಾಗಿ ತಿಳಿಸಿದ್ದಾರೆ.
- Advertisement 2
ರಾಮನಗರ ಜಿಲ್ಲೆಯಾದ್ಯಂತ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ರಾಮನಗರ ರೈಲ್ವೆ ನಿಲ್ದಾಣ ಸಂಪೂರ್ಣ ಜಲಾವೃತವಾಗಿದ್ದು, ರೈಲ್ವೆ ಪ್ಲಾಟ್ ಫಾಂ ತುಂಬಾ ಮಳೆ ನೀರು ತುಂಬಿ ಹರಿಯುತ್ತಿದೆ. ರೈಲು ಬರಲು ಹಳಿ ಕಾಣದಂತೆ ನೀರು ತುಂಬಿರುವ ಹಿನ್ನೆಲೆ ಪ್ರತಿನಿತ್ಯ ಬೆಂಗಳೂರು ಮೈಸೂರಿಗೆ ಓಡಾಡುವ ನೂರಾರು ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: ಅಪ್ಪು ಅಗಲಿ ಹತ್ತು ತಿಂಗಳು: ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬ
- Advertisement 3
- Advertisement 4
ಭಾರೀ ಮಳೆಯಿಂದಾಗಿ ರಾಮನಗರದಲ್ಲಿರುವ ಆರ್ಕೇಶ್ವರ ಕಾಲೋನಿ ಸಂಪೂರ್ಣ ಜಲಾವೃತವಾಗಿದ್ದು, ಕಾಲೋನಿಯಲ್ಲಿರುವ ಮುಕ್ಕಾಲು ಭಾಗ ಮಳೆಯಿಂದ ಮುಳುಗಡೆಯಾಗಿದೆ. ಮನೆಯಲ್ಲಿದ್ದ ದಿನ ಬಳಕೆ ವಸ್ತು, ಬೈಕ್, ಕಾರು ಸಂಪೂರ್ಣ ಜಲಾವೃತವಾಗಿದೆ. ಇದರಿಂದಾಗಿ ಅಲ್ಲಿನ ಜನರಲ್ಲಿ ಆತಂಕ ಮೂಡಿದೆ. ವರುಣನ ಆರ್ಭಟಕ್ಕೆ ಕನಕಪುರ ರಸ್ತೆಯಲ್ಲಿನ ಗೌಡಯನದೊಡ್ಡಿ ಬಳಿ ಇರುವ ಅರ್ಕಾವತಿ ನದಿಯಲ್ಲಿ ರಭಸವಾಗಿ ಹರಿಯುತ್ತಿರುವ ನೀರಿನಲ್ಲಿ ಹಸುವೊಂದು ಕೊಚ್ಚಿ ಹೋಗಿದೆ.
ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿರುವ ರಾಮಕೃಷ್ಣ ಆಸ್ಪತ್ರೆಯ ನೆಲಮಹಡಿ ಸಂಪೂರ್ಣ ಜಲಾವೃತವಾಗಿದ್ದು, ಹೊರರೋಗಿಗಳ ವಿಭಾಗ ಸಂಪೂರ್ಣ ಮುಳುಗಡೆಯಾಗಿದೆ. ಹೀಗಾಗಿ ಆಸ್ಪತ್ರೆಯಲ್ಲಿದ್ದ ರೋಗಿಗಳನ್ನು ಸ್ಥಳಾಂತರಿಸಲಾಗಿದೆ. ಮಳೆಯಿಂದಾಗಿ ವೈದ್ಯಕೀಯ ಉಪಕರಣಗಳು ಸಂಪೂರ್ಣ ಹಾನಿಯಾಗಿದ್ದು, ಸದ್ಯ ಆಸ್ಪತ್ರೆಯ ಸಿಬ್ಬಂದಿ ವೈದ್ಯಕೀಯ ಸಲಕರಣೆಗಳನ್ನ ನೀರಿನಿಂದ ಹೊರತೆಗೆಯುತ್ತಿದ್ದಾರೆ. ಇದನ್ನೂ ಓದಿ: ಹಿಜಬ್ ನಿಷೇಧ: ಅರ್ಜಿದಾರರ ವಿರುದ್ಧ ಸುಪ್ರೀಂಕೋರ್ಟ್ ಗರಂ – ರಾಜ್ಯ ಸರ್ಕಾರ, ಅರ್ಜಿದಾರರಿಗೆ ನೋಟಿಸ್
ಮತ್ತೊಂದೆಡೆ ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯಲ್ಲಿ ವಾಹನ ಸವಾರರ ಪರದಾಟ ನಡಸುತ್ತಿದ್ದು, ಕೆಲ ವಾಹನಗಳು ನೀರಿನಲ್ಲಿ ಮುಳುಗಡೆಯಾಗಿದೆ. ಅಲ್ಲದೇ ರಾಮನಗರ ಸಮೀಪದ ಸಂಗಬಸವನ ದೊಡ್ಡಿ ಬಳಿ ವಾಹನ ಮುಳುಗಡೆಯಾಗಿರುವ ಹಿನ್ನೆಲೆ ಹೆದ್ದಾರಿಯಲ್ಲಿ ಸಾಲುಗಟ್ಟಿ ವಾಹನಗಳು ನಿಂತಿದ್ದು, ಟ್ರಾಫಿಕ್ ಜಾಂ ಸಮಸ್ಯೆ ಎದುರಾಗಿದೆ.
ಧಾರಾಕಾರ ಮಳೆಗೆ ರಾಷ್ಟ್ರೀಯ ದಶಪಥ ಹೆದ್ದಾರಿಯಲ್ಲಿ ನೀರು ತುಂಬಿದ್ದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೇ ಸಂಕಷ್ಟಕ್ಕೆ ಸಿಲುಕಿದ ಪ್ರಯಾಣಿಕರ ರಕ್ಷಣೆಗೆ ಜಿಲ್ಲಾಡಳಿತ ಮುಂದಾಗುತ್ತಿಲ್ಲ, ಸಹಾಯವಾಣಿಯನ್ನೂ ತೆರೆದಿಲ್ಲ ಎಂದು ಕಿಡಿಕಾರಿದ್ದಾರೆ. ಸದ್ಯ ಜೆಸಿಬಿ ಮೂಲಕ ರಸ್ತೆ ಸರಿಪಡಿಸಿ ಸಂಚಾರಕ್ಕೆ ಪೊಲೀಸರು ಅವಕಾಶ ಮಾಡಿದ್ದಾರೆ.
ರಾಮನಗರ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಜನರು ತತ್ತರಿಸಿ ಹೋಗಿದ್ದಾರೆ. ಚನ್ನಪ್ಪಟ್ಟಣದ ರೇಷ್ಮೆ ಮಾರುಕಟ್ಟೆಯ ಮುಂಭಾಗದ ಬೆಂ-ಮೈ ರಾಷ್ಟ್ರೀಯ ಹೆದ್ದಾರಿ ರಸ್ತೆಗೆ ನೀರು ನುಗ್ಗಿದ್ದು ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಚನ್ನಪಟ್ಟಣದ ತಟ್ಟಿಗೆರೆ ಬಡಾವಣೆಗೆ ನೀರು ನುಗ್ಗಿದ್ದು ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಲ್ಲಿಯವರೆಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡದ ಕಾರಣ ಇಲ್ಲಿನ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.