ದಾವಣಗೆರೆ: ಕಳೆದ 40 ವರ್ಷಗಳಿಂದ ಜೆಡಿಎಸ್ನಲ್ಲಿ ಗುರುತಿಸಿಕೊಂಡಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು, ಶನಿವಾರ ದಾವಣಗೆರೆಯಲ್ಲಿ ಅಧಿಕೃತವಾಗಿ ಪಕ್ಷಕ್ಕೆ ರಾಜೀನಾಮೆ ನೀಡಿದ ವಿಚಾರವನ್ನು ಖಚಿತ ಪಡಿಸಿದ್ದಾರೆ.
ದಾವಣಗೆರೆಯಲ್ಲಿ ರಾಜೀನಾಮೆ ನಿರ್ಧಾರ ಪ್ರಕಟಿಸಿದ ರಮೇಶ್ ಬಾಬು, ನಿನ್ನೆಯೇ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರಿಗೆ ರಾಜೀನಾಮೆ ಸಲ್ಲಿಸಿದ್ದೇನೆ. ಇಷ್ಟರಲ್ಲೇ ಬೇರೆ ಪಕ್ಷದ ಜೊತೆ ಗುರುತಿಸಿಕೊಳ್ಳುವೆ. ಅಲ್ಲದೆ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಆಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ ಎಂದು ಹೇಳುವ ಮೂಲಕ ಜೆಡಿಎಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ವಿಚಾರವನ್ನು ಬಹಿರಂಗಪಡಿಸಿದ್ದಾರೆ.
ಜೆಡಿಎಸ್ ಪಕ್ಷದಲ್ಲಿ ಪ್ರಾಮಾಣಿಕರಿಗೆ ಅವಕಾಶವಿಲ್ಲ, ಪಕ್ಷಕ್ಕಾಗಿ ದುಡಿಯುತ್ತಿರುವ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ. ಪ್ರಾದೇಶಿಕ ಪಕ್ಷದ ಅಗತ್ಯವಿದೆ ಎಂಬ ಕಾರ್ಯಕರ್ತರ ನಂಬಿಕೆಗೆ ಇಂದು ಅನ್ಯಾಯವಾಗುತ್ತಿದೆ. ಆದ್ದರಿಂದ ಜೆಡಿಎಸ್ ಪಕ್ಷದ ನಿಷ್ಠರು ಪಕ್ಷ ಬಿಡುತ್ತಿದ್ದಾರೆ. ಅಲ್ಲದೆ ಜೆಡಿಎಸ್ ಪ್ರಾದೇಶಿಕ ಪಕ್ಷದ ಅಸ್ಥಿತ್ವವನ್ನು ಕಳೆದುಕೊಳ್ಳುತ್ತಿದೆ. ಬೇರೆ ಪಕ್ಷದಿಂದ ಆಫರ್ ಬಂದರೆ ಪರಿಗಣಿಸುತ್ತೇನೆ. ನನ್ನ ಮುಂದಿನ ಹಾದಿ ಮುಕ್ತವಾಗಿದೆ, ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಜೆಡಿಎಸ್ ಪಕ್ಷದ ಮೇಲಿನ ತಮ್ಮ ಅಸಮಾಧಾನ ಹೊರ ಹಾಕಿದರು.