– 15 ದಿನಗಳಲ್ಲಿ ಪೂರ್ಣಗೊಳಸಲು ಆಯುಕ್ತರ ಸೂಚನೆ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 2019ರಲ್ಲಿ 185 ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಸಮೀಕ್ಷೆ ಮಾಡಲಾಗಿದ್ದು, ಅದರಲ್ಲಿ 10 ಕಟ್ಟಡಗಳನ್ನು ನೆಲಸಮ ಮಾಡಲಾಗಿರುತ್ತದೆ. ಇದೀಗ ಯೋಜನಾ ವಿಭಾಗದ ವಿಶೇಷ ಆಯುಕ್ತರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿಕೊಂಡು 15 ದಿನಗಳಲ್ಲಿ ಮರು ಸಮೀಕ್ಷೆ ಮಾಡಿ, ನಗರದಲ್ಲಿ ಎಷ್ಟು ಶಿಥಿಲಾವಸ್ಥೆಗೊಂಡಿರುವ ಕಟ್ಟಡಗಳಿವೆ ಎಂಬುದರ ಬಗ್ಗೆ ನಿಖರ ವರದಿ ನೀಡಲು ಮುಖ್ಯ ಆಯುಕ್ತರಾದ ಶ್ರೀ ಗೌರವ್ ಗುಪ್ತ ರವರು ಎಲ್ಲಾ ವಲಯ ಜಂಟಿ ಆಯುಕ್ತರು ಹಾಗೂ ಮುಖ್ಯ ಅಭಿಯಂತರರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಸಮೀಕ್ಷೆ ಮಾಡುವ ಸಂಬಂಧ ಇಂದು ವರ್ಚುವಲ್ ಮೂಲಕ ಸಭೆ ನಡೆಸಲಾಯಿತು. ನಗರದಲ್ಲಿ 2019ರಲ್ಲಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಸಮೀಕ್ಷೆ ಮಾಡಿರುವ ಬಗ್ಗೆ, ಹಾಗೂ ಸಮೀಕ್ಷೆಯ ಪ್ರಕಾರ ಇದುವರೆಗೆ ಎಷ್ಟು ಕಟ್ಟಡಗಳಿಗೆ ನೋಟಿಸ್ ನೀಡಲಾಗಿದೆ. ಎಷ್ಟು ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ ಎಂಬುದರ ಬಗ್ಗೆ ಆಯುಕ್ತರು ಎಂಟೂ ವಲಯಗಳಿಂದ ಮಾಹಿತಿ ಪಡೆದುಕೊಂಡರು. ಇದನ್ನೂ ಓದಿ: ಹೃದಯ ಪರೀಕ್ಷೆ ನಡೆಸಲು ನಿಮ್ಮ ಮನೆ ಬಾಗಿಲಿಗೇ ಬರಲಿದೆ ಮೊಬೈಲ್ ವಾಹನ
ನಗರದಲ್ಲಿ 2019ರಲ್ಲಿ ಮಾಡಿದ್ದ ಸಮೀಕ್ಷೆಯಲ್ಲಿ ಗುರುತಿಸಿದ್ದ 185 ಶಿಥಿಲಾವಸ್ಥೆಯ ಕಟ್ಟಡಗಳ ಪೈಕಿ ಈಗಾಗಲೇ 10 ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ. ಬಾಕಿ 175 ಕಟ್ಟಡಗಳ ಮಾಲೀಕರಿಗೆ ಕೂಡಲೇ ನೋಟಿಸ್ ನೀಡಿ, ಕಟ್ಟಡಗಳನ್ನು ನೆಲಸಮ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ವಲಯ ಜಂಟಿ ಆಯುಕ್ತರುಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ತಾಲೂಕು ಕಚೇರಿಯಲ್ಲಿ ಕುಸಿದು ಬೀಳುತ್ತಿದೆ ಮೇಲ್ಛಾವಣಿ
ನಗರದಲ್ಲಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಪುನರ್ ಪರಿಶೀಲಿಸುವ ಸಂಬಂಧ, ಆಯಾ ವಲಯಗಳಲ್ಲಿ ಸಂಬಂಧಪಟ್ಟ ಎಂಜಿನಿಯರ್ಗಳು ಕಟ್ಟಡಗಳ ಸ್ಥಳಕ್ಕೆ ಭೇಟಿ ನೀಡಿ ಮರು ಪರಿಶೀಲಿಸಬೇಕು. ನಂತರ ನಿಖರ ಮಾಹಿತಿಯನ್ನು ನೀಡಬೇಕು ಎಂದರು. ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಮರು ಸಮೀಕ್ಷೆ ನಡೆಸಿದ ಬಳಿಕ ಆ ಕಟ್ಟಡಗಳನ್ನು ನೆಲಸಮ ಮಾಡುವ ಸಲುವಾಗಿ 15 ದಿನಗಳಲ್ಲಿ ವಲಯವಾರು ಗುತ್ತಿಗೆದಾರರನ್ನು ನೇಮಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಎಲ್ಲಾ ವಲಯ ವಿಶೇಷ ಆಯುಕ್ತರುಗಳು, ಜಂಟಿ ಆಯುಕ್ತರುಗಳು, ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು, ಎಲ್ಲಾ ವಲಯ ಮುಖ್ಯ ಅಭಿಯಂತರರು, ಎಲ್ಲಾ ವಿಭಾಗೀಯ ಕಾರ್ಯಪಾಲಕ ಅಭಿಯಂತರರು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.