ಬೆಂಗಳೂರು: ಸಿಎಸ್ ಪುಟ್ಟರಾಜು ಮೇಲೆ ದೂರುಗಳ ಬಂದ ಹಿನ್ನೆಲೆಯಲ್ಲಿ ಅವರ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದರು. ಬಂದಿದ್ದ ಜನರಿಗೆ ಹಣ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿ ಆದಾಯ ತೆರಿಗೆ ಇಲಾಖೆಗೆ ಸಾಕಷ್ಟು ದೂರುಗಳು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.
ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆ ಸಹಾಯವಾಣಿ ಬಿಡುಗಡೆ ಮಾಡಿ ಕಂಟ್ರೋಲ್ ರೂಂ ತೆರೆದಿದೆ. ಸಾರ್ವಜನಿಕರು ಈ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಿಳಿಸಿತ್ತು. ಇದನ್ನೂ ಓದಿ: ನಾನ್ಯಾಕೆ ಹೆದರಲಿ, ಐಟಿ ದಾಳಿ ನಡೆಸಿದ್ದಕ್ಕೆ ಮೋದಿಗೆ ಧನ್ಯವಾದ: ಪುಟ್ಟರಾಜು
ಮಂಡ್ಯದಲ್ಲಿ ಜೆಡಿಎಸ್ ನಾಯಕರು ಹಣ ಹಂಚಿಕೆ ಮಾಡಿದ್ದಾರೆ ಎನ್ನಲಾದ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಕೆಲವರು ವಿಡಿಯೋ ಸಹಿತ ಆದಾಯ ತೆರಿಗೆ ಇಲಾಖೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.