ಬೆಂಗಳೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಆಪ್ತ ಶಾಸಕರಾದ ರೇಣುಕಾಚಾರ್ಯ ಹಾಗೂ ಡಿಎನ್ ಜೀವರಾಜ್ ಅವರು ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಮರು ನೇಮಕಗೊಂಡಿದ್ದಾರೆ.
ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಈ ಇಬ್ಬರು ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಸವರಾಜ ಬೊಮ್ಮಾಯಿಯವರನ್ನು ಮುಖ್ಯಮಂತ್ರಿ ಎಂದು ಘೋಷಿಸಿದ್ದರು. ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊಸಬರಿಗೆ ಅವಕಾಶ ಸಿಗಬೇಕು ಹಾಗಾಗಿ ನಾನು ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದರು. ಇದನ್ನೂ ಓದಿ: ಪಂಜಾಬ್ ವಿಧಾನಸಭೆ ಚುನಾವಣೆ- ಎಎಪಿಯಲ್ಲಿ ಸಿಎಂ ಅಭ್ಯರ್ಥಿಯ ಬಗ್ಗೆ ಚರ್ಚೆ ಜೋರು
ಯಡಿಯೂರಪ್ಪ ರಾಜೀನಾಮೆ ಬಳಿಕ ಅವರ ಆಪ್ತ ಶಾಸಕರಾದ ರೇಣುಕಾಚಾರ್ಯ ಹಾಗೂ ಜೀವರಾಜ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಕೈ ಬಿಡಲಾಗಿತ್ತು. ಆದರೆ ಮತ್ತೆ ಬೊಮ್ಮಾಯಿ, ಹೊನ್ನಾಳಿ ಶಾಸಕ ರೇಣುಕಾಚಾರ್ಯ ಹಾಗೂ ಶೃಂಗೇರಿ ಶಾಸಕ ಡಿಎನ್ ಜೀವರಾಜ್ ಅವರನ್ನು ತಮ್ಮ ರಾಜಕೀಯ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಈ ಮೂಲಕ ಮಾಜಿ ಸಿಎಂ ಯಡಿಯೂರಪ್ಪನವರ ಆಪ್ತ ಶಾಸಕರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಇದನ್ನೂ ಓದಿ: ಬಿಜೆಪಿ ಸೇರಲ್ಲ, ಕಾಂಗ್ರೆಸ್ನಲ್ಲಿ ಇರಲ್ಲ: ಕ್ಯಾ.ಅಮರೀಂದರ್ ಸಿಂಗ್
ತಮ್ಮ ಆಪ್ತ ಶಾಸಕರು ಹಾಗೂ ಬೆಂಬಲಿಗರನ್ನು ಯಾವುದೇ ಕಾರಣಕ್ಕೂ ಟಾರ್ಗೆಟ್ ಮಾಡಬಾರದು, ನಿಗಮ ಮಂಡಳಿ ಸೇರಿದಂತೆ ಇನ್ನು ಅನೇಕ ಸ್ಥಾನದಲ್ಲಿರುವ ಬೆಂಬಲಿಗರನ್ನು ಮುಂದುವರೆಸಬೇಕು ಎಂದು ಬೊಮ್ಮಾಯಿ ಅವರಿಗೆ ಯಡಿಯೂರಪ್ಪ ಷರತ್ತು ಹಾಕಿದ್ದಾರೆ ಎನ್ನಲಾಗಿದೆ. ಈ ಮೂಲಕ ತಮ್ಮ ವಿರೋಧಿ ಬಣಕ್ಕೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.