ಬೆಂಗಳೂರು: ಸರ್ಕಾರಿ ಕಚೇರಿ, ಶಾಲೆ, ಮಹಿಳೆಯರು ಕೆಲಸ ಮಾಡುವ ಸಂಸ್ಥೆಗಳಲ್ಲಿ ಸ್ಯಾನಿಟರಿ ಪ್ಯಾಡ್ ಸುಡುವ ಯಂತ್ರ ಕಡ್ಡಾಯಗೊಳಿಸಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆಯಲಾಗಿದೆ.
ಮಹಿಳೆಯರು ಬಳಸುವ ಸ್ಯಾನಿಟರಿ ಪ್ಯಾಡ್ಗಳನ್ನು ಕಸದೊಂದಿಗೆ ಎಸೆಯುವುದರಿಂದ ಸಾಕಷ್ಟು ಪರಿಸರ ಹಾನಿಯಾಗುತ್ತಿದೆ. ಅಲ್ಲದೆ ಸಾರ್ವಜನಿಕ ಆರೋಗ್ಯಕ್ಕೆ ಹಾನಿಯಾಗುತ್ತಿದೆ. ಇನ್ನು ಸಾರ್ವಜನಿಕ ಕಟ್ಟಡಗಳಲ್ಲಿ ಶೌಚಾಲಯಕ್ಕೆ ಎಸೆಯುವುದರಿಂದ ತ್ಯಾಜ್ಯ ನೀರು ಹರಿಯುವ ಒಳಚರಂಡಿಗಳು ಕಟ್ಟಿಕೊಳ್ಳುತ್ತವೆ. ಇದರಿಂದಾಗಿ ಸ್ಯಾನಿಟರಿ ಪ್ಯಾಡ್ ಗಳನ್ನು ಸುಡುವ ಇನ್ಸಿನರೇಟರ್ ಯಂತ್ರವನ್ನು ಕಡ್ಡಾಯಗೊಳಿಸುವಂತೆ ಸಿಎಂಗೆ ಮನವಿ ಮಾಡಲಾಗಿದೆ.
ಮುಂದಿನ ಬಜೆಟ್ನಲ್ಲಿ ಅಗತ್ಯ ಹಣ ತೆಗೆದಿರಿಸುವಂತೆ ಮನವಿ ಮಾಡಿ, ಮಾಹಿತಿ ಹಕ್ಕು ಅಧ್ಯಯನ ಕೇಂದ್ರದ ವತಿಯಿಂದ ಸಾಮಾಜಿಕ ಕಾರ್ಯಕರ್ತ ಎಸ್. ಅಮರೇಶ್ ಪತ್ರ ಬರೆದಿದ್ದಾರೆ. ಮಹಿಳೆಯರೇ ಹೆಚ್ಚಾಗಿ ಇರುವ ಮಹಿಳಾ ಕಾಲೇಜುಗಳು, ಐಟಿಬಿಟಿ ಕಂಪನಿ, ಗಾರ್ಮೆಂಟ್ಸ್, ಪಿಜಿಗಳು ಹಾಗೂ ಕಾರ್ಖಾನೆಗಳಲ್ಲಿ ಇನ್ಸಿನರೇಟರ್ (incinerators) ಯಂತ್ರಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಕ್ರಮ ಜಾರಿ ಮಾಡಲು ಮನವಿ ಮಾಡಲಾಗಿದೆ.
ಈ ಯಂತ್ರದೊಳಗೆ ಸ್ಯಾನಿಟರಿ ಪ್ಯಾಡ್ಗಳನ್ನು ಹಾಕಿದಾಗ, ಇವು ಸುಟ್ಟು ಭಸ್ಮವಾಗುತ್ತವೆ. ಇದರಿಂದ ವಾಯು ಮಾಲಿನ್ಯವಾಗುವುದಿಲ್ಲ. ವಾಸನೆಯೂ ಬರುವುದಿಲ್ಲ. ಅತ್ಯಾಧುನಿಕ ಇನ್ಸಿನರೇಟರ್ಗಳು ಮಾರುಕಟ್ಟೆಯಲ್ಲಿ ಲಭ್ಯವಿದ್ದು, ಇವುಗಳನ್ನು ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅಮರೇಶ್, ಇತರೆ ಕಸದೊಂದಿಗೆ ಸ್ಯಾನಿಟರಿ ವೇಸ್ಟ್ ಕೂಡ ಮಿಶ್ರವಾಗುತ್ತಿದೆ. ಇದನ್ನು ವಿಂಗಡಿಸಲಾಗುತ್ತಿಲ್ಲ. ಹೀಗಾಗಿ ಮಹಿಳೆಯರು ಉದ್ಯೋಗ ಮಾಡುವ ಜಾಗದಲ್ಲಿ, ಶಾಲಾ ಕಾಲೇಜುಗಳಲ್ಲಿ ಪರಿಹಾರ ಕಂಡುಕೊಳ್ಳಲು ಈ ಇನ್ಸಿನೇಟರ್ ಬಳಸುವಂತೆ ಮಾಡಲು ಮನವಿ ಮಾಡಲಾಗಿದೆ ಎಂದರು.