ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ದಿನಗಳ ಅವಧಿಯಲ್ಲಿ 3 ಕೊಲೆಯಾಗಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಇಂತಹ ಸನ್ನಿವೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿದ್ದು, ಅದನ್ನು ಇನ್ನೆರಡು ದಿನಗಳ ಕಾಲ ಮುಂದುವರಿಸಿ ಆದೇಶ ಹೊರಡಿಸಲಾಗಿದೆ.
ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮವಹಿಸಲು ಪೊಲೀಸ್ ಇಲಾಖೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸಂಜೆ 6ರಿಂದ ಬೆಳಗ್ಗೆ 6ರವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಈ ನಿರ್ಬಂಧವನ್ನು ಮತ್ತೆ ಎರಡು ದಿನಗಳ ಕಾಲ ಮುಂದುವರಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಫಾಜಿಲ್ ಹತ್ಯೆ ಪ್ರಕರಣ – ಪತ್ತೆಯಾದ ಕಾರಿನಲ್ಲಿ ರಕ್ತದ ಕಲೆ!
ಸಂಜೆ 6ರಿಂದ ಬೆಳಗ್ಗೆ 6 ಗಂಟೆ ಅವಧಿಯಲ್ಲಿ ಯಾವುದೇ ವ್ಯಾಪಾರ ವಹಿವಾಟು ಹಾಗೂ ಅನಗತ್ಯ ವಾಹನಗಳ ಸಂಚಾರಕ್ಕೆ ನಿರ್ಬಂಧಗಳನ್ನು ವಿಧಿಸಲಾಗಿದೆ.
ಜಿಲ್ಲೆಯಲ್ಲಿ ಮದ್ಯದ ಅಂಗಡಿ ಮುಚ್ಚುವ ಆದೇಶವನ್ನೂ ಮುಂದುವರಿಸಲಾಗಿದೆ. ಹೀಗಾಗಿ ಮತ್ತೆರಡು ದಿನಗಳ ಕಾಲ ಮದ್ಯದಂಗಡಿಗಳು ಸಂಪೂರ್ಣ ಬಂದ್ ಆಗಿರಲಿವೆ. ಅಲ್ಲದೇ ಆ.6 ರವರೆಗೆ ಜಿಲ್ಲೆಯಲ್ಲಿ 144 ಸೆಕ್ಷನ್ ಮುಂದುವರಿಕೆ ಮಾಡಿ ಆದೇಶಿಸಲಾಗಿದೆ. ಇದನ್ನೂ ಓದಿ: ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮ: ಎಡಿಜಿಪಿ ಅಲೋಕ್ ಕುಮಾರ್
ಜಿಲ್ಲೆಯಲ್ಲಿ ಮಸೂದ್, ಪ್ರವೀಣ್ ನೆಟ್ಟಾರು, ಫಾಝಿಲ್ ಎಂಬವರನ್ನು ಒಬ್ಬರಾದ ಮೇಲೊಬ್ಬರಂತೆ 10 ದಿನಗಳ ಅವಧಿಯಲ್ಲಿ ದುಷ್ಕರ್ಮಿಗಳು ಹತ್ಯೆಗೈದಿದ್ದರು. ಸರಣಿ ಕೊಲೆಗಳ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಯಿತು. ಇದರಿಂದ ಎಚ್ಚೆತ್ತ ಪೊಲೀಸ್ ಇಲಾಖೆ ಧಾರ್ಮಿಕ ಮುಖಂಡರೊಂದಿಗೆ ಶಾಂತಿ ಸಭೆ ಕೂಡ ನಡೆಸಿತು. ಮುನ್ನೆಚ್ಚರಿಕೆ ಕ್ರಮವಾಗಿ ವಿಧಿಸಲಾಗಿದ್ದ ಕರ್ಫ್ಯೂ ಹಾಗೂ ನಿಷೇಧಾಜ್ಞೆಯನ್ನು ಮುಂದುವರಿಸಲಾಗಿದೆ.