ದಾವಣಗೆರೆ: ಬ್ಯಾಂಕ್ನ ಕಿಟಕಿ ಸರಳುಗಳನ್ನು ಮುರಿದು ಲಾಕರ್ನಲ್ಲಿದ್ದ ನಗದು ಹಾಗೂ ಚಿನ್ನಾಭರಣವನ್ನು ಕಳ್ಳರು ಹೊತ್ತೊಯ್ದ ಘಟನೆ ನ್ಯಾಮತಿ ಪಟ್ಟಣದಲ್ಲಿ ನಡೆದಿದೆ.
ನಗರದ ನೆಹರು ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank of India) ಶಾಖೆಯಲ್ಲಿ ಎರಡು ದಿನಗಳ ಹಿಂದೆ ಕಳ್ಳರು ಈ ಕೃತ್ಯ ಎಸಗಿರುವ ಬಗ್ಗೆ ನ್ಯಾಮತಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಶನಿವಾರ ಹಾಗು ಭಾನುವಾರ ಎರಡು ದಿನ ಬ್ಯಾಂಕ್ ರಜೆ ಇದ್ದ ಕಾರಣ ಶುಕ್ರವಾರ ರಾತ್ರಿ ಕಳ್ಳರು ಈ ಕೃತ್ಯ ಎಸಗಿದ್ದಾರೆ. ಕಿಟಕಿಯ ಸರಳುಗಳನ್ನು ಮುರಿದು ಬ್ಯಾಂಕ್ಗೆ ನುಗ್ಗಿರುವ ಕಳ್ಳರು ಲಾಕರ್ ಒಡೆದು ಅದರಲ್ಲಿಟ್ಟಿದ್ದ ಚಿನ್ನಾಭರಣ ಹಾಗೂ ಹಣ ದೋಚಿದ್ದಾರೆ. ಇಷ್ಟೇ ಅಲ್ಲದೇ ಸಿಸಿಟಿವಿ ಕ್ಯಾಮೆರಾದ ಡಿವಿಆರ್ ಸಮೇತ ಪರಾರಿಯಾಗಿದ್ದಾರೆ.
ಇಂದು (ಸೋಮವಾರ) ಬೆಳಗ್ಗೆ ಕರ್ತವ್ಯಕ್ಕೆ ಆಗಮಿಸಿದ ಬ್ಯಾಂಕ್ ಸಿಬ್ಬಂದಿ ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೋಟ್ಯಂತರ ಮೌಲ್ಯದ ಚಿನ್ನಾಭರಣ ಹಾಗೂ ಹಣ ದರೋಡೆಯಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.