ಅಮರಾವತಿ: ಆಂಧ್ರಪ್ರದೇಶದಲ್ಲಿ ಪಲ್ಟಿಯಾದ ವಾಹನವೊಂದರಿಂದ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆಯಲಾಗಿದೆ. ಈ ಮೂಲಕ ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಎರಡನೇ ಬಾರಿ ದೊಡ್ಡ ಮೊತ್ತದ ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ವಾಹನ ವಿಜಯವಾಡದಿಂದ ವಿಶಾಖಪಟ್ಟಣಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಪೂರ್ವ ಗೋದಾವರಿ ಪೊಲೀಸರು ವಾಹನದಿಂದ 7 ಬಾಕ್ಸ್ಗಳಲ್ಲಿ ತುಂಬಿದ್ದ 7 ಕೋಟಿ ರೂ. ಹಣವನ್ನು (Rs 7 crore cash seized In Andhrapradesh) ವಶಪಡಿಸಿಕೊಂಡಿದ್ದಾರೆ.
ಸಿಕ್ಕಿಬಿದ್ದಿದ್ದು ಹೇಗೆ.?: ನಲ್ಲಜರ್ಲ ಮಂಡಲದ ಅನಂತಪಲ್ಲಿ ಎಂಬಲ್ಲಿ ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ವಾಹನ ಪಲ್ಟಿಯಾಗುತ್ತಿದತೆಯೇ ಅದರಲ್ಲಿದ್ದ ಸುಮಾರು7 ರಟ್ಟಿನ ಡಬ್ಬಗಳನ್ನು ಒಂದು ಗೋಣಿಚೀಲದಿಂದ ಇನ್ನೊಂದು ಚೀಲಕ್ಕೆ ಹಾಕುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಶಪಡಿಸಿಕೊಂಡ ಮೊತ್ತ ಸುಮಾರು 7 ಕೋಟಿ ಎಂದು ವರದಿಯಾಗಿದೆ. ಇದನ್ನೂ ಓದಿ: ಟೈಯರ್ ಬ್ಲಾಸ್ಟ್ ಆಗಿ ಕ್ರೂಸರ್ ಪಲ್ಟಿ – ಮೂವರು ಮಹಿಳೆಯರ ದುರ್ಮರಣ
ಪಲ್ಟಿಯಾದ ವಾಹನದ ಚಾಲಕನಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಗೋಪಾಲಪುರಂ ಆಸ್ಪತ್ರೆಗೆ ರವಾನಿಸಲಾಗಿದೆ. ಈ ನಡುವೆ ಪೊಲೀಸರು ತನಿಖೆ ಆರಂಭಿಸಿದ್ದು, ನಗದು ಮೂಲವನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ.
ಗುರುವಾರ ರಾಜ್ಯದ ಎನ್ಟಿಆರ್ ಜಿಲ್ಲೆಯ ಚೆಕ್ಪೋಸ್ಟ್ನಲ್ಲಿ ಟ್ರಕ್ನಿಂದ ಲೆಕ್ಕಕ್ಕೆ ಸಿಗದ 8 ಕೋಟಿ ರೂಪಾಯಿ ಮೌಲ್ಯದ ಹಣವನ್ನು ವಶಪಡಿಸಿಕೊಂಡ ಎರಡು ದಿನಗಳ ನಂತರ ಈ ಘಟನೆ ನಡೆದಿದೆ. ನಗದು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆಂದ್ರಪ್ರದೇಶದಲ್ಲಿ ಮೇ 13ರಂದು ಚುನಾವಣೆ ನಡೆಯಲಿದೆ.