ಮೈಸೂರು: ರಾತ್ರಿ ಎಂಟು ಗಂಟೆಗೆ ಬಂದ್ ಆಗುತ್ತಿದ್ದ ಚಾಮುಂಡೇಶ್ವರಿ ದೇವಸ್ಥಾನವನ್ನು ಇಂದು ಮತ್ತು ನಾಳೆ ರಾತ್ರಿ 10 ಗಂಟೆಯವರೆಗೆ ತೆರೆದು ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಜಿಲ್ಲಾಧಿಕಾರಿ ಅವರಿಗೆ ಸೂಚನೆ ನೀಡಲಾಗಿದೆ ಎಂದು ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಅರಮನೆ ಆವರಣದಲ್ಲಿ ಇಂದು ಬೆಳಗ್ಗೆ ಮಾವುತರು ಮತ್ತು ಕಾವಾಡಿಗರಿಗೆ ಆಯೋಜಿಸಿದ್ದ ಉಪಹಾರ ಕೂಟದಲ್ಲಿ ಭಾಗವಹಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡೇಶ್ವರಿ ದೇವಸ್ಥಾನವನ್ನು ರಾತ್ರಿ 8 ಗಂಟೆಗೆ ಬಂದ್ ಮಾಡಲಾಗುತ್ತಿತ್ತು. ನಗರದ ದೀಪಾಲಂಕಾರ ನೋಡಿಕೊಂಡು ದೇವಸ್ಥಾನಕ್ಕೆ ತೆರಳುವವರು ತಾಯಿ ಚಾಮುಂಡೇಶ್ವರಿಯ ದರ್ಶನ ಮಾಡಲೆಂದು ಶುಕ್ರವಾರದವರೆಗೆ ರಾತ್ರಿ 10 ಗಂಟೆಯವರೆಗೆ ದರ್ಶನದ ಅವಧಿ ವಿಸ್ತರಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.
ಜಂಬೂಸವಾರಿಗೆ ಎಲ್ಲ ಸಿದ್ಧತೆ ಆಗಿದೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸದೇ 500 ಜನರಿಗೆ ಜಂಬೂಸವಾರಿ ವೀಕ್ಷಿಸಲು ಅವಕಾಶ ನೀಡಲಾಗಿದೆ. ಕೆಲವರು ಒಂದು ವಾರ, ಮತ್ತೆ ಕೆಲವರು ದೀಪಾವಳಿವರೆಗೆ ದೀಪಾಲಂಕಾರ ವಿಸ್ತರಣೆ ಮಾಡುವಂತೆ ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಅವರ ಬಳಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಾಡಿನೆಲ್ಲೆಡೆ ಆಯುಧಪೂಜೆಯ ಸಂಭ್ರಮ – ರಾಜವಂಶಸ್ಥರ ಆಯುಧಗಳಿಗೆ ಪೂಜೆ ಸಲ್ಲಿಸಲಿರುವ ಯದುವೀರ್
ಇದೇ ವೇಳೆ ಡಿಕೆ. ಶಿವಕುಮಾರ್ ಪರ್ಸಂಟೇಜ್ ವಿಚಾರ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದ ಹಿರಿಯ ನಾಯಕರು ಈ ಬಗ್ಗೆ ಹೇಳಿದ್ದಾರೆ. ನಾನು ಶಾಸಕನಾಗಿದ್ದಾಗ ಇದೇನು ಇರಲಿಲ್ಲ. ಆದರೆ ಈಗ ಅವರಿಗೆ ಗೊತ್ತಿರಬಹುದು ಅದಕ್ಕೆ ಹೇಳಿದ್ದಾರೆ. ಕಾಂಗ್ರೆಸ್ನಲ್ಲಿ ಷಡ್ಯಂತ್ರ ನಡೆಯುತ್ತಿದೆ ಎಂದು ಹಿಂದೆಯೇ ಹೇಳಿದ್ದೆ. ಸಿದ್ದರಾಮಯ್ಯ ವರ್ಸಸ್ ಡಿಕೆ. ಶಿವಕುಮಾರ್ ಷಡ್ಯಂತ್ರ ನಡೆಯುಸುತ್ತಿದ್ದಾರೆ. ಇದು ಆ ಪಕ್ಷದ ಆಂತರಿಕ ವಿಚಾರ ಎಂದು ಉತ್ತರಿಸಿದ್ದಾರೆ. ಇದನ್ನೂ ಓದಿ: ಸಿಂಹಕ್ಕೂ ಅಂಜದೇ ಮಾಂಸ ತಿನ್ನಿಸಿದ ರಾಕಿ ಬಾಯ್ – ವೀಡಿಯೋ ವೈರಲ್
23 ಸಚಿವರನ್ನು ಸಿದ್ದರಾಮಯ್ಯ ಬೀದಿಪಾಲು ಮಾಡಿದರು ಎಂಬ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ಕುರಿತಂತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಪಕ್ಷ ಬಿಡುವಂತೆ ಹೇಳಿಲ್ಲ. ಇದು ಹಳೇ ವಿಷಯ, ಇದನ್ನೇ ಮತ್ತೆ, ಮತ್ತೆ ಹೇಳುವುದು ಸರಿಯಲ್ಲ. ಕುಮಾರಸ್ವಾಮಿ ಅವರು ರಾತ್ರಿ 10 ಗಂಟೆಗೆ ಮಲಗಿ, ಕಣ್ಮುಚ್ಚಿಕೊಂಡು ಯೋಚಿಸಿದರೆ 23 ಜನ ಯಾಕೆ ಹೋದರು ಅಂತ ಗೊತ್ತಾಗುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.