ನೀಟ್ ಪ್ರಶ್ನೆಪತ್ರಿಕೆ ಸೋರಿಕೆ (NEET Paper Leak) ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ (Students Protest) ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಬೆಂಬಲ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿರುವ ಸಲ್ಲು, ಪ್ರತಿಭಟನೆ ಶಾಂತಿಯುತವಾಗಿ ನಡೆಯುತ್ತಿತ್ತು. ಅದು ಹಿಂಸೆಗೆ ತಿರುಗಿದ್ದು ಖೇದಕರ. ಪ್ರಶ್ನೆಪತ್ರಿಕೆ ಸೋರಿಕೆ ಗಂಭೀರ ವಿಷಯ. ಈ ಪ್ರತಿಭಟನೆಯನ್ನು ಯಾವುದೇ ರೀತಿಯ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳಬೇಡಿ ಎಂದು ಮನವಿ ಮಾಡಿದ್ದಾರೆ.
View this post on Instagram
ಇನ್ಸ್ಟಾಗ್ರಾಂ ಪೋಸ್ಟ್ನಲ್ಲಿ ಏನಿದೆ?
ಇದು ಅತ್ಯಂತ ಶಾಂತಿಯುತ ಹೋರಾಟವಾಗಿತ್ತು. ಆದರೆ ಅದು ಹಿಂಸಾತ್ಮಕ ತಿರುವು ಪಡೆದುಕೊಂಡಿರುವುದು ನಿಜಕ್ಕೂ ಹೃದಯವಿದ್ರಾವಕ. ಗಾಯಗೊಂಡ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳ ಬಗ್ಗೆ ನನ್ನ ಹೃದಯ ಮಿಡಿಯುತ್ತಿದೆ.
ಪ್ರಶ್ನೆಪತ್ರಿಕೆ ಸೋರಿಕೆ ಅತ್ಯಂತ ಗಂಭೀರವಾದ ಸಮಸ್ಯೆ. ನಮ್ಮ ದೇಶದ ವಿದ್ಯಾರ್ಥಿಗಳು ತಮ್ಮ ಪೋಷಕರ ಬೆಂಬಲದೊಂದಿಗೆ ಉತ್ತಮ, ನ್ಯಾಯಸಮ್ಮತ ಮತ್ತು ಪಾರದರ್ಶಕ ಶಿಕ್ಷಣ ವ್ಯವಸ್ಥೆಗಾಗಿ ಒಂದಾಗಿ ಧ್ವನಿ ಎತ್ತಿರುವುದನ್ನು ನೋಡಿ ನನಗೆ ಸಂತೋಷವಾಗಿದೆ. ಅವರು ತೆಗೆದುಕೊಂಡಿರುವ ನಿಲುವನ್ನು ನಾನು ಮೆಚ್ಚುತ್ತೇನೆ. ಕಠಿಣವಾಗಿ ಓದಿ ತಮ್ಮ ಭವಿಷ್ಯವನ್ನು ಮಾತ್ರವಲ್ಲ, ಇನ್ನಷ್ಟು ಶಕ್ತಿಶಾಲಿ ಮತ್ತು ವಿದ್ಯಾವಂತ ಭಾರತದ ನಿರ್ಮಾಣಕ್ಕೂ ಕೊಡುಗೆ ನೀಡಬೇಕೆಂಬ ಅವರ ಸಮರ್ಪಣೆ, ಪ್ರಾಮಾಣಿಕತೆ ಮತ್ತು ದೃಢಸಂಕಲ್ಪ ನಿಜಕ್ಕೂ ಸ್ಫೂರ್ತಿದಾಯಕವಾಗಿದೆ. ಈ ಪ್ರತಿಭಟನೆ ಶಿಕ್ಷಣದ ಮಹತ್ವದ ಮೇಲಿನ ಅವರ ಧೈರ್ಯ, ಸಹನೆ ಮತ್ತು ಬದ್ಧತೆಯನ್ನು ತೋರಿಸಿದೆ.
ಈ ವಿಷಯ ವಿದ್ಯಾರ್ಥಿಗಳು ಮತ್ತು ಶಿಕ್ಷಣ ವ್ಯವಸ್ಥೆಯ ನಡುವಿನದ್ದು. ಇದನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳಬಾರದು. ಸರಿಯಾದದ್ದಕ್ಕಾಗಿ ಧ್ವನಿ ಎತ್ತಿದ ವಿದ್ಯಾರ್ಥಿಗಳಿಗೆ ಇದರ ಸಂಪೂರ್ಣ ಶ್ರೇಯಸ್ಸು ಸಲ್ಲಬೇಕು. ಸರ್ಕಾರವೂ ಅವರ ಸಮಸ್ಯೆಯನ್ನು ಆಲಿಸಿ, ಅವರಿಗೆ ಅಗತ್ಯವಾದ ಬೆಂಬಲ ನೀಡಿ, ಶಿಕ್ಷಣ ವ್ಯವಸ್ಥೆಯನ್ನು ಇನ್ನಷ್ಟು ಬಲಿಷ್ಠ ಮತ್ತು ಪಾರದರ್ಶಕವಾಗಿಸಲು ಕ್ರಮ ಕೈಗೊಳ್ಳುತ್ತದೆ ಎಂಬ ವಿಶ್ವಾಸ ನನಗಿದೆ. ಸಕಾರಾತ್ಮಕ ನಿರ್ಧಾರಕ್ಕಾಗಿ ನಾನು ಪ್ರಾರ್ಥಿಸುತ್ತಿದ್ದೇನೆ. ಉತ್ತಮ ಶಿಕ್ಷಣಕ್ಕಾಗಿ ಶ್ರಮಿಸುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗೂ ದೇವರು ಆಶೀರ್ವದಿಸಲಿ.
ಶಿಕ್ಷಣವೇ ಮುಂದಿನ ಟ್ರೆಂಡ್ ಆಗಬೇಕು. ವರ್ಷದಿಂದ ವರ್ಷಕ್ಕೆ ಅದು ಇನ್ನಷ್ಟು ಗೌರವಯುತ, ಆಕರ್ಷಕ ಮತ್ತು ಪ್ರತಿಷ್ಠಿತವಾಗಬೇಕು. ಜಗತ್ತಿನ ನಾನಾ ದೇಶಗಳ ವಿದ್ಯಾರ್ಥಿಗಳು ಭಾರತಕ್ಕೆ ಬಂದು ಶಿಕ್ಷಣ ಪಡೆಯುವಂತೆ ಭಾರತವು ವಿಶ್ವದ ಶಿಕ್ಷಣ ಕೇಂದ್ರವಾಗಿ ಬೆಳೆಯಲಿ ಎಂದು ಆಶಿಸಿದ್ದಾರೆ.
