Cinema
ಕಾಶಿ ವಿಶ್ವೇಶ್ವರ ಸ್ವಾಮಿ ದರ್ಶನ ಪಡೆದ ಕಿಚ್ಚ ಸುದೀಪ್

ಕೋಲಾರ: ಕೋರಗೊಂಡಹಳ್ಳಿ ಗ್ರಾಮದಲ್ಲಿ ಪುರಾತನ ಶ್ರೀ ಕಾಶಿ ವಿಶ್ವೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ದಾರ ಹಾಗೂ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಖ್ಯಾತ ನಟ ಕಿಚ್ಚ ಸುದೀಪ್ ಭೇಟಿ ನೀಡಿದ್ದಾರೆ.
ತಮ್ಮ ಸ್ನೇಹಿತ ಹಾಗೂ ಬೆಂಗಳೂರು ದಕ್ಷಿಣ ವಲಯ ಡಿಸಿಪಿ ದೇವರಾಜ್ ಅವರ ಹುಟ್ಟೂರಿನಲ್ಲಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸುದೀಪ್, ದೇವಸ್ಥಾನಕ್ಕೆ ಬಂದು ದೇವರಿಗೆ ಪೂಜೆ ಸಲ್ಲಿಸಿದರು. ಬಳಿಕ ಕೆಲ ಕಾಲ ಇದ್ದು ತಮ್ಮ ಅಭಿಮಾನಿಗಳತ್ತ ಕೈಬೀಸಿ ಹೊರಟರು.
ಇತ್ತ ಸುದೀಪ್ ಬರುವ ವಿಚಾರ ತಿಳಿದು ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಈ ವೇಳೆ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಪೀಠಾಧಿಪತಿಯಾದ ಶ್ರೀ ಶ್ರೀ ನಿರ್ಮಲಾನಂದ ಸ್ವಾಮಿಗಳು ಕೂಡ ದೇವಾಲಯಕ್ಕೆ ಆಗಮಿಸಿ ದೇವಸ್ಥಾನ ವೀಕ್ಷಣೆ ಮಾಡಿದ್ರು. ಬಳಿಕ ಪ್ರತಿಷ್ಠಾಪನೆ ಮಾಡಿದ್ದ ಕಾಶಿವಿಶ್ವೇಶ್ವರ ಸ್ವಾಮಿ ಲಿಂಗಕ್ಕೆ ಅಭಿಷೇಕ ಮಾಡಿ ಪೂಜೆ ಸಲ್ಲಿಸಿದರು.
ಭಕ್ತಾದಿಗಳು ನಿರ್ಮಲಾನಂದ ಸ್ವಾಮಿಗಳ ಪಾದಪೂಜೆ ಮಾಡಿ ಬೀಳ್ಕೊಟ್ಟರು. ಇದೇ ವೇಳೆ ಮಾಜಿ ಸಚಿವ ಚಲುವರಾಯ ಸ್ವಾಮಿ, ವರ್ತೂರ್ ಪ್ರಕಾಶ್ ಸೇರಿದಂತೆ ಹಲವು ಮಂದಿ ಅಧಿಕಾರಿಗಳು ಮತ್ತು ಭಕ್ತರು ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದರು.
