ರಾಯಚೂರು: ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ನೂತನ ಶಿಕ್ಷಣ ನೀತಿ ಕೇಂದ್ರೀಕೃತ ಯೋಜನೆಯಾಗಿದೆ ಎಂದು ಐಎಎಸ್ ವೃತ್ತಿಗೆ ರಾಜೀನಾಮೆ ನೀಡಿರುವ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.
ರಾಯಚೂರಿನಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ನಕ್ಸಲ್ ದೊಡ್ಡಿಪಾಳ್ಯ ನರಸಿಂಹ ಮೂರ್ತಿಯನ್ನು ಸಸಿಕಾಂತ್ ಸೆಂಥಿಲ್ ಭೇಟಿ ಮಾಡಲು ಬಂದಿದ್ದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತಪ್ಪು ಮಾಹಿತಿಯಿಂದ ನರಸಿಂಹ ಮೂರ್ತಿ ಬಂಧನವಾಗಿದೆ. ಹೀಗಾಗಿ ಅವರನ್ನು ನೋಡಲು ರಾಯಚೂರಿಗೆ ಬಂದಿದ್ದೇನೆ. ನಾನು ಜನರ ಜೊತೆಗೆ ಇರುತ್ತೇನೆ, ಸರ್ಕಾರದ ಹಿಡನ್ ಅಜೆಂಡಾಗಳ ಕುರಿತು ಜನರಿಗೆ ಮಾಹಿತಿ ನೀಡುತ್ತೇನೆ. ನಾನು ಅಧಿಕಾರದಲ್ಲಿ ಇದ್ದಾಗ ಹಲವು ನಕ್ಸಲ್ರನ್ನು ಹೊರಗೆ ತರಲು ಕೆಲಸ ಮಾಡಿದ್ದೇನೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರದ ಹೊಸ ಶಿಕ್ಷಣ ನೀತಿ ಯೋಜನೆ ಪ್ರಧಾನ ಮಂತ್ರಿಗಳ ಕೈಯಲ್ಲಿ ಇರುವುದರಿಂದ ಹೆಚ್ಚಿನ ಅನುದಾನಕ್ಕೆ ಒತ್ತು ನೀಡಲ್ಲ. ಈ ನೀತಿಯು ಪ್ರಾಥಮಿಕ ಶಿಕ್ಷಣವನ್ನು ಪಡೆಯುವ ವಿದ್ಯಾರ್ಥಿಗಳ ಶೈಕ್ಷಣಿಕ ಹಕ್ಕನ್ನು ಕಸಿದು ಕೊಂಡಂತಾಗುತ್ತದೆ. ಇದರಿಂದ ರಾಷ್ಟ್ರೀಯ ಶಿಕ್ಷಣ ನೀತಿ ಒಕ್ಕೂಟಕ್ಕೆ ಧಕ್ಕೆಯಾಗುತ್ತದೆ ಎಂದು ಅಸಮಧಾನ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ಈ ನಡೆಯ ಕುರಿತು ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿದ್ದರೂ ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ನಾನು ದೇಶದಲ್ಲಿ ಪರಿಸ್ಥಿತಿ ಸರಿ ಇಲ್ಲವೆಂದು ರಾಜೀನಾಮೆ ನೀಡಿದ್ದೇನೆ. ಯಾವುದೇ ಕಾರಣಕ್ಕೂ ಮತ್ತೆ ಕೆಲಸಕ್ಕೆ ಮರಳುವುದಿಲ್ಲ. ಈ ವಿಚಾರ ಈಗಾಗಲೇ ಸರ್ಕಾರದ ಗಮನಕ್ಕೂ ತಂದಿದ್ದೇನೆ ಎಂದು ಸಸಿಕಾಂತ್ ಸೆಂಥಿಲ್ ಸ್ಪಷ್ಟಪಡಿಸಿದರು.