ಮಡಿಕೇರಿ: ಶಾಲಾ ಕಟ್ಟಡದ ದುರಸ್ತಿ ವೇಳೆ ಗೋಡೆ ಕುಸಿದುಬಿದ್ದ ಪರಿಣಾಮ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನ ಮುಳ್ಳುಸೋಗೆ ಗ್ರಾಮದಲ್ಲಿ ನಡೆದಿದೆ.
ಮೂಲತಃ ಹುಣಸೂರು ತಾಲೂಕಿನ ರತ್ನಪುರಿ ದರ್ಗದ ನಿವಾಸಿ ಮಹಮ್ಮದ್ ಜಾಫರ್ ಅಲಿಯಾಸ್ ಬಾಬು(34) ಮೃತಪಟ್ಟ ಕಾರ್ಮಿಕ. ಬಾಬು ಸೇರಿದಂತೆ ಕೆಲ ಕಾರ್ಮಿಕರು ಇಂದು ಮುಳ್ಳುಸೋಗೆಯ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡವನ್ನು ಕೆಡವುತ್ತಿದ್ದರು. ಈ ವೇಳೆ ಗೋಡೆ ಕುಸಿದು ಬಾಬು ಮೇಲೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಬಾಬು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕುಶಾಲನಗರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಘಟನೆ ಗೊತ್ತಿದ್ದರೂ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಶಾಲೆಯ ಮುಖ್ಯಶಿಕ್ಷಕರು ಆಸ್ಪತ್ರೆಗೆ ಆಗಮಿಸಿರಲಿಲ್ಲ ಕಾರ್ಮಿಕನ ಸಾವಿಗೆ ಅವರು ಬೆಲೆ ಇಲ್ಲದಂತೆ ನಡೆದುಕೊಂಡಿದ್ದಾರೆ ಎಂದು ಕುಶಾಲನಗರದ ಮುಸ್ಲಿಂ ಸಮುದಾಯದ ಮುಖಂಡರು, ಮುಸ್ಲಿಂ ಒಕ್ಕೂಟದ ಪದಾಧಿಕಾರಿಗಳು, ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ನಗರ ಘಟಕದ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv