ಬಾಗಲಕೋಟೆ: ತಮ್ಮ ಗ್ರಾಮವನ್ನು ನೂತನ ತಾಲೂಕನ್ನಾಗಿ ರಚನೆ ಮಾಡುವಂತೆ ಆಗ್ರಹಿಸಿ ಪ್ರಾಥಮಿಕ ಶಾಲೆಯ ನೂರಾರು ಮಕ್ಕಳು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆಯುವ ಮೂಲಕ ಪತ್ರ ಚಳುವಳಿಯನ್ನ ನಡೆಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳೇ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಗ್ರಾಮದಲ್ಲಿ ಭಾನುವಾರದಿಂದ ಗ್ರಾಮಸ್ಥರು ಸಾವಳಗಿ ನೂತನ ತಾಲೂಕು ರಚನೆಗೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾಗಲಿದ್ದು, ಈ ಹಿನ್ನೆಲೆಯಲ್ಲಿ ಮಕ್ಕಳು ಸಿಎಂಗೆ ಪತ್ರ ಬರೆದಿದ್ದಾರೆ.
ಇನ್ನು ವಿಶೇಷ ಅಂದರೆ ಡಿಸೆಂಬರ್ 19 ರಂದು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದು, ಹೀಗಾಗಿ ಸಿಎಂ ಗಮನ ಸೆಳೆಯುವ ಕಾರಣದಿಂದ ಸಾಮೂಹಿಕ ಪತ್ರ ಚಳುವಳಿಗೆ ಮುಂದಾಗಿದ್ದಾರೆ. ಪ್ರತಿಯೊಬ್ಬ ಮಕ್ಕಳು ಸಹ ಪತ್ರ ಬರೆದು ಸಿಎಂ ಅವರ ಬೆಂಗಳೂರ ವಿಳಾಸಕ್ಕೆ ಪೋಸ್ಟ್ ಮಾಡಿದ್ದಾರೆ. ತಮ್ಮ ಗ್ರಾಮ ನೂತನ ತಾಲೂಕಾಗಿ ರಚನೆಯಾಗಿ ಇನ್ನಷ್ಟು ಅಭಿವೃದ್ಧಿ ಕಾಣಬೇಕೆಂಬ ಉದ್ದೇಶದಿಂದ ಸಿಎಂಗೆ ಪತ್ರ ಬರೆಯುವ ಮೂಲಕ ಪತ್ರ ಚಳುವಳಿ ನಡೆಸಿರುವುದಾಗಿ ವಿದ್ಯಾರ್ಥಿಗಳು ತಿಳಿಸಿದ್ದಾರೆ.