ಮಡಿಕೇರಿ: ಕೊಡಗಿನಲ್ಲಿ ಭಾನುವಾರ ಕೊಂಚ ಮಧ್ಯಾಹ್ನದವರೆಗೆ ಬಿಡುವು ನೀಡಿದ್ದ ಮಳೆ ಮತ್ತೆ ಅಬ್ಬರಿಸುತ್ತಿದೆ. ಕಳೆದ ರಾತ್ರಿಯಿಂದ ಸುರಿದ ಧಾರಾಕಾರ ಮಳೆಯಿಂದ ಹಲವೆಡೆಗಳಲ್ಲಿ ಸಂಚಾರಕ್ಕೆ ಅಡಚಣೆಯಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಭಾರೀ ಮಳೆ ಸುರಿದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಎಂದು ಜಿಲ್ಲಾಧಿಕಾರಿ ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ.
ಕಳೆದ ರಾತ್ರಿಯೇ ರಜೆ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಪೋಷಕರು ನಿಟ್ಟುಸಿರುಬಿಟ್ಟಿದ್ದಾರೆ. ಇನ್ನೂ ದಕ್ಷಿಣ ಕೊಡಗಿನ ವಿರಾಜಪೇಟೆ, ಗೋಣಿಕೊಪ್ಪಲು, ಕಾಕೋಟುಪರಂಬು, ಪೊನ್ನಂಪೇಟೆ, ಶ್ರೀಮಂಗಲ, ಹುದಿಕೇರಿ, ಬಾಳೆಲೆ, ಟಿ.ಶೆಟ್ಟಿಗೇರಿ ಮುಂತಾದ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಲವು ಭಾಗಗಳಲ್ಲಿ ಮರ ಬಿದ್ದಿದ್ದು ಅದನ್ನು ತೆರವುಗೊಳಿಸಲಾಗುತ್ತಿದೆ.
ಮಡಿಕೇರಿ ತಾಲೂಕಿನ ಭಾಗಮಂಡಲದಲ್ಲಿಯೂ ಮಳೆಯ ಆರ್ಭಟ ಮುಂದುವರಿದಿದೆ. ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದೆ. ಅದೇ ರೀತಿ ದಕ್ಷಿಣ ಕೊಡಗಿನ ಲಕ್ಷ್ಮಣ ತೀರ್ಥ ನದಿ ಉಕ್ಕಿ ಹರಿಯುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ.
ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಚೇತರಿಸಿಕೊಳ್ಳುತ್ತಿದ್ದಂತೆ ಮತ್ತೊಮ್ಮೆ ಮಳೆ ಧಾರಾಕಾರವಾಗಿ ಸುರಿಯುತ್ತಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ. ಇನ್ನೂ ಕೆಲವು ದಿನಗಳ ಕಾಲ ಇದೇ ರೀತಿ ಮಳೆ ಸುರಿದರೆ ಭಾರೀ ನಷ್ಟ ಅನುಭವಿಸುವ ಸಾಧ್ಯತೆ ಇದೆ.