ಬೆಂಗಳೂರು: ಪದ್ಮಶ್ರೀ ಪುರಸ್ಕೃತ ಬಾಹ್ಯಾಕಾಶ ವಿಜ್ಞಾನಿ ಡಾ.ಎಸ್.ಕೆ. ಶಿವಕುಮಾರ್ ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ.
ಕಳೆದ 10 ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಡಾ.ಎಸ್.ಕೆ ಶಿವಕುಮಾರ್ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ವಿಧಿವಶರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. 2008ರಲ್ಲಿ ಚಂದ್ರಯಾನ ಉಡಾವಾಣೆಯ ಯಶಸ್ಸಿನ ರೂವಾರಿಯಾಗಿದ್ದ ಡಾ.ಶಿವಕುಮಾರ್ 2010ರಲ್ಲಿ ಪ್ರತಿಷ್ಠಿತ ಪದ್ಮಶ್ರೀ, ರಾಜ್ಯೋತ್ಸವ ಪ್ರಶಸ್ತಿಗೂ ಭಾಜನರಾಗಿದ್ದರು.
ಬೆಂಗಳೂರಿನ ಇಸ್ರೋ ಬಾಹ್ಯಾಕಾಶ ಕೇಂದ್ರದಲ್ಲಿ ನಿರ್ದೇಶಕರಾಗಿ, ಪೀಣ್ಯದ ಇಸ್ರೋ ಟೆಲಿಮೆಟ್ರಿಕ್ ಟ್ರ್ಯಾಕಿಂಗ್ ಕೇಂದ್ರದಲ್ಲಿಯೂ ಸೇವೆ ಸಲ್ಲಿಸಿದ್ದರು. ಬ್ಯಾಲಾಳು ಉಪಗ್ರಹ ಕೇಂದ್ರದ ಸ್ಥಾಪನೆ ರೂವಾರಿಯಾಗಿದ್ದ ಶಿವಕುಮಾರ್, ಪ್ರಸ್ತುತ ಕರ್ನಾಟಕ ವಿಜ್ಞಾನ ತಂತ್ರಜ್ಞಾನ ಸಂಸ್ಥೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಇಸ್ರೋ ಲೇಔಟ್ನಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ಬನಶಂಕರಿ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.