ರಾಯಚೂರು: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ 144 ಸೆಕ್ಷನ್ ಜಾರಿಯಾಗಿದ್ದು, ಅಧಿಕಾರಿಗಳು ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ನಗರಸಭೆ ಹಾಗೂ ಪೊಲೀಸ್ ಅಧಿಕಾರಿಗಳು ಅಂಗಡಿಗಳನ್ನು ಬಂದ್ ಮಾಡಿಸುತ್ತಿದ್ದಾರೆ.
ಆಹಾರ, ನೀರು, ಔಷಧಿ ಸೇರಿ ಅಗತ್ಯ ವಸ್ತು ಮಾರಾಟಕ್ಕೆ ಮಾತ್ರ ಅವಕಾಶವಿದೆ. ಹೋಟೆಲ್ ಗಳಲ್ಲಿ ಊಟ, ತಿಂಡಿ ಪಾರ್ಸಲ್ ಮಾರಾಟಕ್ಕೆ ಮಾತ್ರ ಅನುವು ಮಾಡಿಕೊಡಲಾಗಿದೆ. ಬೀದಿ ಬದಿಯ ಟೀ ಅಂಗಡಿ, ಮಟನ್, ಚಿಕನ್ ಕಬಾಬ್ ಸೆಂಟರ್ ಸೇರಿ ಇತರೆ ಅಂಗಡಿಗಳನ್ನು ಬಂದ್ ಮಾಡಲಾಗುತ್ತಿದೆ.
ಎಲ್ಲಾ ಅಂಗಡಿಗಳನ್ನು ಬಂದ್ ಮಾಡುವಂತೆ ಆಟೋ ರಿಕ್ಷಾದಲ್ಲಿ ಧ್ವನಿ ವರ್ಧಕ ಮೂಲಕ ಸೂಚನೆ ನೀಡಲಾಗುತ್ತಿದೆ. ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ಸೂಚನೆ ಮೆರೆಗೆ ವ್ಯಾಪಾರ ವಹಿವಾಟು ಬಂದ್ ಮಾಡಲಾಗುತ್ತಿದೆ.
ರಾಯಚೂರು ಜಿಲ್ಲೆಯಲ್ಲಿ ಒಟ್ಟು 71 ಜನ ವಿದೇಶದಿಂದ ಬಂದಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 259 ಜನ ಹೋಮ್ ಕೋರೈಂಟೆನ್ ನಲ್ಲಿದ್ದಾರೆ. ರಾಯಚೂರು ಹಾಗೂ ಸಿಂಧನೂರು ತಾಲೂಕಿನಲ್ಲಿ ಹೆಚ್ಚು ಜನ ಹೋಂ ಕೇರ್ ನಲ್ಲಿದ್ದಾರೆ.