ತುಮಕೂರು: ಇಂದು ಸಿದ್ದಗಂಗಾಶ್ರೀಗಳ 11ನೇ ಪುಣ್ಯಾರಾಧನೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಮಠದ ಸುತ್ತಮುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಬುಧವಾರ ಮಠಕ್ಕೆ ಬಂದಿರುವ ದಕ್ಷಿಣ ವಲಯ ಐಜಿಪಿ ದಯಾನಂದ್, ಭದ್ರತೆಯ ಉಸ್ತುವಾರಿ ವಹಿಸಿದ್ದು, ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ. ಲಕ್ಷ ಲಕ್ಷ ಭಕ್ತರು ಮಠಕ್ಕೆ ಧಾವಿಸಲಿರುವ ಹಿನ್ನೆಲೆಯಲ್ಲಿ ಕೆಲ ಮಾರ್ಗ ಬದಲಾವಣೆಯನ್ನು ಪೊಲೀಸ್ ಮಾಡಿದೆ.
ಎನ್ಹೆಚ್ 4ನಲ್ಲಿ ಗೂಡ್ಸ್ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ದಾವಣಗೆರೆ ಚಿತ್ರದುರ್ಗದ ಕಡೆಯಿಂದ ಬರುವ ಗೂಡ್ಸ್ ವಾಹನಗಳಿಗೆ ಶಿರಾ, ಮಧುಗಿರಿ, ಕೊರಟಗೆರೆ, ದಾಬಸ್ ಪೇಟೆ ಮೂಲಕ ಬೆಂಗಳೂರಿಗೆ ತೆರಳಲು ಸಂಪರ್ಕ ಕಲ್ಪಿಸಲಾಗಿದೆ. ಬೆಂಗಳೂರಿನಿಂದ ದಾವಣಗೆರೆಯತ್ತ ಹೋಗುವ ಗೂಡ್ಸ್ ವಾಹನಗಳಿಗೆ ದಾಬಸ್ಪೇಟೆ, ಕೊರಟಗೆರೆ, ಮಧುಗಿರಿ ಮೂಲಕ ಶಿರಾಗೆ ಸಂಪರ್ಕ ಕಲ್ಪಿಸಲಾಗಿದೆ. ಉಳಿದಂತೆ ಬಸ್, ಕಾರುಗಳಿಗೆ ಸಂಚಾರಕ್ಕೆ ಪೊಲೀಸ್ ಇಲಾಖೆ ಅವಕಾಶ ಕಲ್ಪಿಸಿದೆ.
ಇಂದು ಶಿವೈಕ್ಯ ಸಿದ್ದಗಂಗಾ ಶ್ರೀಗಳ ಪುಣ್ಯಾರಾಧನೆ ಕಾರ್ಯಕ್ರಮವಿದ್ದು, ನಾಡಿನ ಮೂಲೆ ಮೂಲೆಯಿಂದ ಭಕ್ತರು ಆಗಮಿಸಿದ್ದಾರೆ. ಭಕ್ತರು ರಾತ್ರಿಯೇ ಬಂದು ಶ್ರೀಮಠದಲ್ಲಿ ತಂಗಿದ್ದಾರೆ. ರಾತ್ರಿಯಿಡಿ ಶಿವನಾಮ ಸ್ಮರಣೆ ಮಾಡಿ ಜಾಗರಣೆ ಮಾಡಿದ್ದಾರೆ. ಇಂದು ಬೆಳಗ್ಗೆ 5 ಗಂಟೆಯಿಂದ ಪೂಜಾ ಕೈಂಕರ್ಯ ಆರಂಭವಾಗಿದ್ದು, ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv