ರತನ್ ಗಂಗಾಧರ್ (Rathan Gangadhar) ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಸೀಸ್ ಕಡ್ಡಿ’ ಚಿತ್ರದ (Sees Kaddi) ಟ್ರೈಲರ್ ರಿಲೀಸ್ ಆಗಿದೆ. ಈ ಕುರಿತಾದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಸಿನಿಮಾ ಬಗೆಗಿನ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದೆ. ಐವರು ಪ್ರತಿಭಾನ್ವಿತ ನಿರ್ದೇಶಕರು ಅತಿಥಿಗಳಾಗಿ ಆಗಮಿಸಿದ್ದು ವಿಶೇಷ. ಘೋಸ್ಟ್ ಖ್ಯಾತಿಯ ಶ್ರೀನಿ, ಮಹಿರಾ ಖ್ಯಾತಿಯ ನಿರ್ದೇಶಕ ಮಹೇಶ್ ಗೌಡ, ಡೊಳ್ಳು ಖ್ಯಾತಿಯ ನಿರ್ದೇಶಕ ಸಾಗರ್ ಪುರಾಣಿಕ್, ಆಯುಷ್ ಮಲ್ಲಿ, ಚೆಲುವರಾಜ್ ಮುಂತಾದವರು ಈ ಪತ್ರಿಕಾಗೋಷ್ಠಿಯಲ್ಲಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಇದನ್ನೂ ಓದಿ:ಬೇಕಂತಲೇ ಪಿತೂರಿ ಮಾಡಲಾಗಿದೆ, ನನ್ನ ಗಂಡನಿಗೆ ನ್ಯಾಯ ಸಿಗೋವರೆಗೂ ಹೋರಾಡ್ತೀನಿ: ಮಡೆನೂರು ಮನು ಪತ್ನಿ

ಗ್ರಹಣ ಪ್ರೊಡಕ್ಷನ್ ಮೂಲಕ ರತನ್ ಗಂಗಾಧರ್, ಸಂಪತ್ ಶಿವಶಂಕರ್, ಕೃತಿ ನಾಣಯ್ಯ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಬಾಲ್ಯ ಸ್ನೇಹಿತರಾದ ಇವರೆಲ್ಲರೂ ಒಟ್ಟಿಗೆ ಈ ಸಿನಿಮಾ ನಿರ್ಮಾಣ ಮಾಡಿದ್ದರ ಹಿಂದೆ ಸಿನಿಮಾ ವ್ಯಾಮೋಹವಿದೆ. ಈ ಸಂದರ್ಭದಲ್ಲಿ ಮಾತಾಡಿದ ನಿರ್ದೇಶಕ ಶ್ರೀನಿ, ಮಕ್ಕಳ ಮುಗ್ಧತೆಯನ್ನು ತಾಜಾತನದಿಂದ ಸೆರೆ ಹಿಡಿದು ದೃಶ್ಯವಾಗಿಸೋದೇ ನಿರ್ದೇಶನದ ನಿಜವಾದ ಸವಾಲು. ಅದನ್ನು ಈ ಚಿತ್ರದಲ್ಲಿ ಸಮರ್ಥವಾಗಿ ಮಾಡಲಾಗಿದೆ. ಈ ಸಿನಿಮಾ ಗೆಲ್ಲಬೇಕು. ಕಮರ್ಷಿಯಲ್ ಆಗಿ ಇಂತಹ ಸಿನಿಮಾಗಳು ಯಶಸ್ಸು ಕಾಣಬೇಕೆಂದು ಶುಭಹಾರೈಸಿದರು.
ಇತ್ತೀಚೆಗಷ್ಟೇ ತೆರೆಗಂಡು ಯಶಸ್ವಿ ಪ್ರದರ್ಶನ ಕಾಣುತ್ತಿರೋ ‘ಪಪ್ಪಿ’ ಚಿತ್ರದ ನಿರ್ದೇಶಕ ಆಯುಶ್ ಮಲ್ಲಿ ಮಾತನಾಡಿ, ತಮ್ಮ ಸಿನಿಮಾಗೆ ನೀಡಿದಂಥಾದ್ದೇ ಪ್ರೋತ್ಸಾಹವನ್ನು ‘ಸೀಸ್ ಕಡ್ಡಿ’ ಚಿತ್ರಕ್ಕೂ ಕೊಡುವಂತೆ ಅರಿಕೆ ಮಾಡಿಕೊಂಡರು. ಐದು ಕಥೆ, ಐದು ಕನ್ನಡದ ಉಪಭಾಷೆ ಮತ್ತು ಐದು ಪ್ರದೇಶಗಳ ಸಮಾಗಮದೊಂದಿಗೆ ಇಲ್ಲಿನ ಕಥೆ ಗರಿಬಿಚ್ಚಿಕೊಂಡಿದೆಯಂತೆ. ಗ್ರಹಣ ಎಲ್ ಎಲ್ ಪಿ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರಕ್ಕೆ ಸುನಿಲ್ ನರಸಿಂಹಮೂರ್ತಿ ಛಾಯಾಗ್ರಹಣ, ಕೆ.ಸಿ ಬಾಲಸಾರಂಗನ್ ಸಂಗೀತ ನಿರ್ದೇಶನ, ಅನಿರುದ್ಧ್ ಹರ್ಷವರ್ಧನ್ ಸಂಕಲನ, ಆಶಾ ಥಾಮಸ್ ವಸ್ತ್ರ ವಿನ್ಯಾಸವಿದೆ. ಸಿತಿನ್ ಅಪ್ಪಯ್ಯ, ಬಿ ಎಸ್ ರಾಮಮೂರ್ತಿ, ಮಾನ್ವಿ ಬಳಗಾರ್, ನೊಣವಿನಕೆರೆ ರಾಮಕೃಷ್ಣಯ್ಯ, ಪ್ರಥಮ್ ರಾಜೇ ಅರಸ್, ಸಂತೋಷ್ ಕರ್ಕಿ, ಅನುಷ್ಕಾ ಟಕ್ಕಲಕಿ, ಸಂಜಯ್ ಗೌಡ, ಶ್ರೇಷ್ಠ್ ಜಪ್ತಿಮಠ್, ಮಹೇಂದ್ರ ಗೌಡ, ದೀಪಿಕಾ ಅಡ್ತಲೆ, ರಾಘವೇಂದ್ರ ಭಟ್, ನಾಗರಾಜ್ ರಾವ್, ರೇಖಾ ಕೂಡ್ಲಿಗಿ, ಉದಾತ್, ಜಯಂತ್ ವೆಂಕಟ್, ಅಮೋಘವರ್ಷ, ಅನೂಪ್ ಬಿ ಆರ್, ಶರ್ಮಿಳಾ ಕಾರ್ತಿಕ್, ಅಭಿಲಾಶ್ ಗೌಡ, ಗಂಗಾಧರ್, ಅಭಿಷೇಕ್, ಅಕುಲ್ ಮುಂತಾದವರ ತಾರಾಗಣವಿರುವ ಈ ಚಿತ್ರ ಜೂನ್ 6ರಂದು ತೆರೆಗಾಣಲಿದೆ.


