ಬೆಂಗಳೂರು: ಹಿರಿಯ ನಟಿ ಲೀಲಾವತಿ ಅವರು ಇಂದು ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಪುತ್ರ ವಿನೋದ್ ರಾಜ್ ಅವರೊಂದಿಗೆ ಆಗಮಿಸಿದ್ದ ಅವರು ಸಿಎಂ ಕುಮಾರಸ್ವಾಮಿ ಬಳಿ ಸೋಲದೇವನಹಳ್ಳಿ ಜನವಸತಿ ಪ್ರದೇಶವನ್ನು ಅರಣ್ಯ ವ್ಯಾಪ್ತಿಯಿಂದ ತೆಗೆಯುವಂತೆ ಮನವಿ ಮಾಡಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಇಲ್ಲಿನ ಸುಮಾರು 900 ಎಕರೆ ಪ್ರದೇಶವನ್ನು ಅರಣ್ಯವೆಂದು ಘೋಷಣೆ ಮಾಡಿದೆ. ಇದರಿಂದಾಗಿ 650 ಕ್ಕೂ ಹೆಚ್ಚು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ನಾವು ಆ ಹಳ್ಳಿಯಲ್ಲಿ ವಾಸ ಮಾಡುತ್ತಿದ್ದು, ದಿನ ನಿತ್ಯ ಕಾಡು ಪ್ರಾಣಿಗಳಿಂದ ನಮಗೆ ತೊಂದರೆಯಾಗುತ್ತಿದೆ. ಆದ್ದರಿಂದ ನಮಗೆ ಪರಿಹಾರ ಒದಗಿಸಿಕೊಡಿ ಎಂದು ಸಿಎಂಗೆ ಮನವಿ ಮಾಡಿದ್ದಾಗಿ ತಿಳಿಸಿದರು.
ಸೋಲದೇವನ ಹಳ್ಳಿ ಅರಣ್ಯ ಪ್ರದೇಶವನ್ನು ಅರಣ್ಯ ವಲಯ ಎಂದು ಘೋಷಣೆ ಮಾಡಿರುವುದರಿಂದ ಅಲ್ಲಿ ಕಾಡು ಪ್ರಾಣಿಗಳನ್ನು ತಂದು ಬಿಡುತ್ತಾರೆ. ಇದರಿಂದ ಮತ್ತಷ್ಟು ಸಮಸ್ಯೆಯಾಗುತ್ತಿದೆ. ಆ ಪ್ರದೇಶದ ಬಡ ಜನರ ಪರವಾಗಿ ಸಿಎಂ ಬಳಿ ಮನವಿ ಮಾಡಿದ್ದೇವೆ. ನಮಗೆ ಮತ್ತೆ ಸೋಮವಾರ ಬರಲು ಸಿಎಂ ಹೇಳಿದ್ದು, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮಾತನಾಡುವುದಾಗಿ ಭರವಸೆ ನೀಡಿದ್ದಾರೆ ಎಂದರು.
ಅರಣ್ಯ ಇಲಾಖೆ ಪ್ರದೇಶ ಎಂದು ಘೋಷಣೆ ಮಾಡಿರುವುದರಿಂದ ಸಾವಿರಾರು ರೈತರು ಕೃಷಿ ಮಾಡುತ್ತಾ ಬಂದಿರುವ ಭೂಮಿಯೂ ಕೂಡ ಕಳೆದುಕೊಳ್ಳುವ ಆತಂಕ ಎದುರಾಗಿದೆ. ಆದ್ದರಿಂದ ಕಳೆದ 80 ರಿಂದ 90 ವರ್ಷಗಳಿಂದ ಅದೇ ಭೂಮಿಯನ್ನು ನಂಬಿ ಜೀವನ ನಡೆಸುತ್ತಿರುವ ರೈತರ ಪರ ಸಿಎಂ ಅವರಿಗೆ ಮನವಿ ಸಲ್ಲಿಸಲು ಬಂದಿದ್ದೇವೆ. ಸಣ್ಣ ರೈತರಿಗೆ ಇದರ ವಿರುದ್ಧ ಮಾತನಾಡಲು ಸಾಧ್ಯವಿಲ್ಲ. ಆದ್ದರಿಂದ ನಾವು ಸಿಎಂ ಅವರ ಮೇಲಿನ ಭರವಸೆಯಿಂದ ಮಾತುಕತೆ ನಡೆಸಿದ್ದಾಗಿ ವಿನೋದ್ ರಾಜ್ ತಿಳಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್ಬುಕ್ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews