ಬೆಂಗಳೂರು: ರಾಜ್ಯ ಬಿಜೆಪಿಯ (BJP) ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ರಾಮಚಂದ್ರೇಗೌಡ (88) ಅವರು ವಯೋಸಹಜ ಕಾಯಿಲೆಯಿಂದಾಗಿ ಇಂದು ಮುಂಜಾನೆ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯ ಮತ್ತು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ರಾಮಚಂದ್ರೇಗೌಡ(Ramachandre Gowda) ರಾಜಾಜಿನಗರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಅವರು ಕೊನೆಯುಸಿರೆಳೆದಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸುವಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (Yediyurappa) ಅವರಿಗೆ ಹೆಗಲಿಗೆ ಹೆಗಲು ಕೊಟ್ಟು ಸಾತ್ ನೀಡಿದ್ದ ಪ್ರಮುಖ ನಾಯಕರಲ್ಲಿ ರಾಮಚಂದ್ರೇಗೌಡರು ಒಬ್ಬರಾಗಿದ್ದರು. ಪಕ್ಷದ ಆರಂಭದ ದಿನಗಳಿಂದಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಪಕ್ಕಾ ಆರ್ಎಸ್ಎಸ್ ಹಿನ್ನೆಲೆ ಹೊಂದಿದ್ದ ರಾಮಚಂದ್ರೇಗೌಡರು, 1953ರಲ್ಲೇ ಸಂಘವನ್ನು ಸೇರುವ ಮೂಲಕ ತಮ್ಮ ಸಾರ್ವಜನಿಕ ಜೀವನ ಆರಂಭಿಸಿದರು. ತದನಂತರ 1970 ರಲ್ಲಿ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶ ಪಡೆದರು.
ಬಿಜೆಪಿಯ ಮುಂಚಿನ ರೂಪವಾಗಿದ್ದ ‘ಭಾರತೀಯ ಜನಸಂಘ’ದ ವತಿಯಿಂದ ಅಂದಿನ ಬೆಂಗಳೂರು ನಗರ ನಿಗಮಕ್ಕೆ (ಬಿಸಿಸಿ – ಈಗಿನ ಜಿಬಿಎ ) ಆಯ್ಕೆಯಾದ ಮೊದಲ ಕಾರ್ಪೊರೇಟರ್ ಎಂಬ ಹೆಗ್ಗಳಿಕೆ ರಾಮಚಂದ್ರೇಗೌಡರದ್ದಾಗಿತ್ತು. ಆ ಮೂಲಕ ಬೆಂಗಳೂರಿನಲ್ಲಿ ಪಕ್ಷದ ಗಟ್ಟಿಯಾದ ಬೇರುಗಳನ್ನು ಬಿಡಲು ಅವರು ಕಾರಣರಾಗಿದ್ದರು.
ರಾಜ್ಯ ರಾಜಕಾರಣದಲ್ಲಿ ಮೇಲ್ಮನೆಯ ಅತ್ಯಂತ ಪ್ರಭಾವಿ ನಾಯಕರಾಗಿದ್ದ ಇವರು, ಸತತವಾಗಿ ಐದು ಬಾರಿ ವಿಧಾನ ಪರಿಷತ್ (MLC) ಸದಸ್ಯರಾಗಿ ಆಯ್ಕೆಯಾಗಿ ದಾಖಲೆ ಬರೆದಿದ್ದರು. ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರದಲ್ಲಿ ಇವರು ವೈದ್ಯಕೀಯ ಶಿಕ್ಷಣ ಸಚಿವರಾಗಿ ಮಹತ್ವದ ಜವಾಬ್ದಾರಿ ನಿಭಾಯಿಸಿದ್ದರು.
2010 ರಲ್ಲಿ ವೈದ್ಯಕೀಯ ಕಾಲೇಜುಗಳ ನೇಮಕಾತಿ ಹಗರಣದಲ್ಲಿ ಇವರ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಆದರೆ ಸುದೀರ್ಘ ಕಾನೂನು ಹೋರಾಟದ ನಂತರ ಹೈಕೋರ್ಟ್ ಈ ಪ್ರಕರಣದಲ್ಲಿ ಅವರಿಗೆ ಸಂಪೂರ್ಣ ಕ್ಲೀನ್ ಚಿಟ್ ನೀಡಿ ದೋಷಮುಕ್ತಗೊಳಿಸಿತ್ತು.
ಸುಮಾರು ಐದು ದಶಕಗಳ ಕಾಲ ಸಕ್ರಿಯ ರಾಜಕೀಯದಲ್ಲಿದ್ದ ರಾಮಚಂದ್ರೇಗೌಡರು 2018 ರಲ್ಲಿ ವಯೋಸಹಜ ಕಾರಣಗಳಿಂದಾಗಿ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದರು. ಇವರ ನಿಧನದೊಂದಿಗೆ ಕರ್ನಾಟಕ ಬಿಜೆಪಿಯ ಆರಂಭಿಕ ದಿನಗಳ ಒಂದು ಮಹತ್ವದ ಅಧ್ಯಾಯ ಕೊನೆಗೊಂಡಂತಾಗಿದೆ.
