ಕಲಬುರಗಿ: ರಾಜ್ಯಾದ್ಯಂತ 63ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮಾಚರಣೆ ನಡೆಯುತ್ತಿದೆ. ಆದರೆ ಕಲಬುರಗಿಯಲ್ಲಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿ ಪ್ರತ್ಯೇಕ ದಿನಾಚರಣೆ ಮಾಡಲು ಕೆಲವರು ಮುಂದಾಗಿದ್ದು, ಇದಕ್ಕೆ ಪೊಲೀಸರು ಅಡ್ಡಪಡಿಸಿ ವಶಕ್ಕೆ ಪಡೆದಿದ್ದಾರೆ.
ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ ಮಾಡಿದ ಕೆಲ ಮಠಾಧೀಶರು ಮತ್ತು 50 ಕ್ಕೂ ಅಧಿಕ ಹೋರಾಟಗಾರರ ಬಂಧನವಾಗಿದೆ. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಂ.ಎಸ್ ಪಾಟೀಲ್ ನೇತೃತ್ವದಲ್ಲಿ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಪ್ರತ್ಯೇಕ ಧ್ವಜಾರೋಹಣಕ್ಕೆ ಮುಂದಾಗಿದ್ದರು. ಆದರೆ ಮಾರ್ಗ ಮಧ್ಯೆ ಹೋರಾಟಗಾರರನ್ನ ತಡೆದ ಸ್ಟೇಷನ್ ಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪ್ರತ್ಯೇಕ ಧ್ವಜರೋಹರಣಕ್ಕೆ ಯತ್ನಿಸಿದ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನೇಚ್ಚರಿಕೆ ಕೈಗೊಂಡಿರುವ ಪೊಲೀಸರು ಪಟೇಲ್ ವೃತ್ತದಲ್ಲಿ ಬಿಗಿ ಪೊಲೀಸ್ ವ್ಯವಸ್ಥೆ ಮಾಡಿದ್ದಾರೆ. ಹೋರಾಟಗಾರರು ಪ್ರತ್ಯೇಕ ಧ್ವಜರೋಹರಣಕ್ಕೆ ಯತ್ನಿಸಿದ ವೇಳೆ ತಡೆದ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಪರ ಘೋಷಣೆ ಕೂಗಿದ್ದಾರೆ. ಅಲ್ಲದೇ ಹೈದರಾಬಾದ್ ಕರ್ನಾಟಕಕ್ಕೆ ನೀಡಿರುವ ಸಂವಿಧಾನದ 371 ಜೆ ಅಡಿ ಸರಿಯಾದ ಮೀಸಲಾತಿ ಸಿಗುತ್ತಿಲ್ಲ ಎಂದು ಹೋರಾಟಗಾರರು ಆಗ್ರಹಿಸಿದ್ದರು. ಆದರೆ ಈ ಹೋರಾಟಕ್ಕೆ ಸ್ಥಳೀಯ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದು, ವರ್ಷಕ್ಕೆ ಒಂದು ದಿನ ಮಾಧ್ಯಮದಲ್ಲಿ ಪ್ರಚಾರ ಪಡೆಯಲು ಇಂತಹ ಹೋರಾಟ ಮಾಡುತ್ತಾರೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv