ಗುಜರಾತ್‌ ವಿವಿ ಮಾನಹಾನಿ ಕೇಸ್‌ – ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಜಾ

Public TV
2 Min Read
arvind kejriwal 1 1

ನವದೆಹಲಿ: ಪ್ರಧಾನಿ ಮೋದಿಯವರ (Narendra Modi) ಶೈಕ್ಷಣಿಕ ಪದವಿ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ಗುಜರಾತ್ ವಿಶ್ವವಿದ್ಯಾಲಯದ (Gujarat University) ರಿಜಿಸ್ಟ್ರಾರ್ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಪ್ರಶ್ನಿಸಿ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

narendra modi 1

ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಹೃಷಿಕೇಶ್ ರಾಯ್ ನೇತೃತ್ವದ ದ್ವಿ ಸದಸ್ಯ ಪೀಠ ಅರ್ಜಿ ವಜಾ ಮಾಡಿದೆ. ನ್ಯಾಯಾಲಯದಲ್ಲಿ ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಡಾ.ಅಭಿಷೇಕ್ ಮನು ಸಿಂಘ್ವಿ , ಮೋದಿಯವರ ಪದವಿಯನ್ನು ವಿಶ್ವವಿದ್ಯಾಲಯ ಏಕೆ ಪ್ರಕಟಿಸುತ್ತಿಲ್ಲ ಎಂದು ಪ್ರಶ್ನಿಸಿದರು. ಅದು ನಕಲಿ ಪದವಿಯೇ? ಒಂದು ವೇಳೆ ಹೇಳಿಕೆ ಮಾನಹಾನಿಕರವಾಗಿದ್ದರೆ, ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡುವುದು ಮೋದಿಯವರೇ ಹೊರತು ಗುಜರಾತ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಅಲ್ಲ. ಹೇಳಿಕೆಗಳನ್ನು ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದಂತೆ ಮಾನಹಾನಿಕರವೆಂದು ಪರಿಗಣಿಸಬಾರದು ಎಂದು ವಾದಿಸಿದರು.

ವಿಶ್ವವಿದ್ಯಾನಿಲಯದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಈ ವೇಳೆ ಮೋದಿಯವರ ಪದವಿ ಪ್ರಮಾಣ ಪತ್ರದ ಪ್ರತಿಯನ್ನು ಒದಗಿಸುವಂತೆ ಕೇಂದ್ರ ಮಾಹಿತಿ ಆಯೋಗದ ನಿರ್ದೇಶನವನ್ನು ರದ್ದುಗೊಳಿಸಿದ ಗುಜರಾತ್ ಹೈಕೋರ್ಟ್ ಆದೇಶದ ಬಗ್ಗೆ ಪೀಠಕ್ಕೆ ತಿಳಿಸಿದರು. ಆ ತೀರ್ಪಿನಲ್ಲಿ ಕೇಜ್ರಿವಾಲ್ ವಿರುದ್ಧ ಹೈಕೋರ್ಟ್ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ ಎಂದು ಹೇಳಿದರು.

ವಿಚಾರಣೆಯ ಒಂದು ಹಂತದಲ್ಲಿ, ಕೇಜ್ರಿವಾಲ್ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಲು ಸಿದ್ಧರಾಗಿದ್ದಾರೆ ಎಂದು ಸಿಂಘ್ವಿ ಹೇಳಿದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸಾಲಿಸಿಟರ್ ಜನರಲ್, ಈಗಿನ ದೂರುದಾರರು ಅಜಾಗರೂಕ ಹೇಳಿಕೆಗಳನ್ನು ನೀಡಿ ನಂತರ ಕ್ಷಮಿಸಿ ಎಂದು ಹೇಳುವ ಅಭ್ಯಾಸ ಹೊಂದಿದ್ದಾರೆ. ದಿ.ಅರುಣ್ ಜೇಟ್ಲಿ ಅವರ ಕಾಲದಿಂದಲೂ ಇದನ್ನೇ ಮಾಡುತ್ತಿದ್ದಾರೆ ಎಂದು ಹೇಳಿದರು.

ಇದಕ್ಕೆ ಉತ್ತರಿಸಿದ ಸಿಂಘ್ವಿ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆ ಪಡೆಯುವ ಮೂಲಕ ಕೇಜ್ರಿವಾಲ್ ರಾಜಕೀಯ ಜೀವನದಿಂದ ಅನರ್ಹಗೊಳಿಸುವುದು ಸಂಪೂರ್ಣ ಉದ್ದೇಶವಾಗಿದೆ ಎಂದು ಹೇಳಿದರು. ಇದಕ್ಕೆ ಉತ್ತರಿಸಿ ತುಷಾರ್ ಮೆಹ್ತಾ, ಸಂಜಯ್ ಸಿಂಗ್ ಮತ್ತು ಅರವಿಂದ್ ಕೇಜ್ರಿವಾಲ್ ಪ್ರಕರಣ ಹೇಗೆ ಭಿನ್ನವಾಗಿದೆ ಎಂದು ವಿವರಿಸಿದರು. ವಾದ ಆಲಿಸಿದ ಬಳಿಕ ಕೋರ್ಟ್ ಕೇಜ್ರಿವಾಲ್ ಅರ್ಜಿ ವಜಾಗೊಳಿಸಿದೆ.

Share This Article