ತುಮಕೂರು: ಸ್ಮಾಟ್ ಸಿಟಿ ಯೋಜನೆಯಿಂದ ಸಾಕಷ್ಟು ವಿವಾದಕ್ಕೆ ಗುರಿಯಾಗಿದ್ದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಕಳೆದ 8 ವರ್ಷಗಳಿಂದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹುದ್ದೆಯಲ್ಲಿ ಭದ್ರವಾಗಿ ತಳವೂರಿದ್ದ ಶಾಲಿನಿ ರಜನೀಶ್ ವಿರುದ್ಧ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಭ್ರಷ್ಟಾಚಾರದ ನಡೆದಿದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆರೋಪ ಮಾಡಿದ್ದರು. ಅಲ್ಲದೆ ಅವರನ್ನು ಅಮಾನತು ಮಾಡುವಂತೆ ಕೂಡ ಒತ್ತಾಯಿಸಿದ್ದರು. ಈ ಎಲ್ಲಾ ಆರೋಪಗಳ ಹಿನ್ನೆಲೆಯಲ್ಲಿ ಸರ್ಕಾರ ಶಾಲಿನಿ ರಜನೀಶ್ ಅವರನ್ನು ಚಿಕ್ಕಮಗಳೂರಿಗೆ ವರ್ಗಾವಣೆ ಮಾಡಿ ಆದೇಶಿಸಿದೆ.
ಎಲ್.ಎ.ಅತೀಕ್ ಅವರನ್ನು ತುಮಕೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯನ್ನಾಗಿ ನಿಯೋಜಿಸಲಾಗಿದೆ. ಹಾಲಿ ಬಿಜೆಪಿ ಸಂಸದ ಜಿ.ಎಸ್.ಬಸವರಾಜು, ನಗರ ಶಾಸಕ ಜ್ಯೋತಿಗಣೇಶ್, ಕಾಂಗ್ರೆಸ್ ಮಾಜಿ ಶಾಸಕ ರಫೀಕ್ ಅಹಮದ್ ಕೂಡ ಶಾಲಿನಿ ವಿರುದ್ಧ ಅಸಮಾಧಾನ ಹೊರಹಾಕಿದ್ದರು.
ಸ್ಮಾರ್ಟ್ ಸಿಟಿ ಹೆಸರಿನಲ್ಲಿ ತುಮಕೂರು ನಗರವನ್ನು ಧೂಳು ಸಿಟಿ ಮಾಡಿದ್ದಾರೆ. ಅವೈಜ್ಞಾನಿಕ ಕಾಮಗಾರಿಗಳಿಂದ ಜನ ಹೈರಾಣಾಗಿದ್ದಾರೆ. ಅಲ್ಲದೆ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಹಾಗೂ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದೆ ಎಂಬ ಟೀಕೆಗಳು ಕೇಳಿ ಬಂದಾಗ ಮೆಲುಸ್ತುವಾರಿಗಾಗಿ ಅಧಿಕಾರಿಗಳನ್ನು ನೇಮಕ ಮಾಡಿ ಗುಣ ಮಟ್ಟದ ತೇಪೆ ಹಾಕಿದ್ದರು. ಆದರೆ ಈವರೆಗೆ ಅಧಿಕಾರಿಗಳು ಕಳಪೆ ಗುಣಮಟ್ಟದ ವರದಿ ನೀಡಿದ ಬಗ್ಗೆ ತುಟಿ ಬಿಚ್ಚಿರಲಿಲ್ಲ ಎಂದು ಆರೋಪಿಸಿದ್ದರು.