ಬೆಳಗಾವಿ: ಸರ್ಕಾರಿ ಶಾಲೆಗಳನ್ನು ಉಳಿಸುವುದರ ಜೊತೆಗೆ ಅಭಿವೃದ್ಧಿಗೊಳಿಸೋಣ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಹೇಳಿದರು.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಮತಕ್ಷೇತ್ರದ ಬೋರಗಾಂವ ಪಟ್ಟಣದಲ್ಲಿ, ಲೋಕೋಪಯೋಗಿ ಇಲಾಖೆ ವತಿಯಿಂದ ಮಂಜೂರಾದ 10.60 ಲಕ್ಷ ರೂ. ವೆಚ್ಚದಲ್ಲಿ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಗಂಡು ಮಕ್ಕಳ ಶಾಲೆಗೆ ನೂತನ ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಇದನ್ನೂ ಓದಿ: ರಾಮನಗರ ಶಾಂತಿಯ ಜಿಲ್ಲೆ, ಗೂಂಡಾ ರೀತಿಯ ವರ್ತನೆ ಮಾಡಿದ್ದು ತಪ್ಪು: ಎಚ್ಡಿಕೆ ಕಿಡಿ
ಮಾತನಾಡಿದ ಅವರು, ಕ್ಷೇತ್ರದಲ್ಲಿ ಯಾವುದೇ ಮಗು ಕೂಡ ಶಿಕ್ಷಣದಿಂದ ವಂಚಿತರಾಗಬಾರದು. ಎಲ್ಲರೂ ಕೂಡ ಶಿಕ್ಷಣ ಪಡೆಯಬೇಕು ಎಂಬುದು ನನ್ನ ಆಶಯ. ಈ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಮಾಡುವ ಮೂಲಕ ಭವ್ಯ ಭಾರತದ ಸತ್ಪ್ರಜೆಗಳಾಗುವ ಮಕ್ಕಳ ಕಲಿಕೆಗೆ ಉತ್ತಮ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಊರಿನ ಹಿರಿಯರು, ಗಣ್ಯರು, ಸ್ಥಳೀಯ ಮುಖಂಡರು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.