ಅಡ್ಜೆಸ್ಟ್‌ಮೆಂಟ್‌ ಪಾಲಿಟಿಕ್ಸ್ ಶುರು – ದಿಢೀರ್ ಬಿಎಸ್‍ವೈಯನ್ನು ಭೇಟಿಯಾದ ಬೇಗ್

Public TV
2 Min Read
cm bsy roshan baig

ಬೆಂಗಳೂರು: ದಿಢೀರ್ ಬೆಳವಣಿಗೆಯೊಂದರಲ್ಲಿ ಶಿವಾಜಿನಗರದ ಅನರ್ಹ ಕಾಂಗ್ರೆಸ್ ಶಾಸಕ ರೋಷನ್ ಬೇಗ್ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಮಧ್ಯಾಹ್ನ ಡಾಲರ್ಸ್ ಕಾಲೋನಿ ನಿವಾಸಕ್ಕೆ ರೋಷನ್ ಬೇಗ್ ಆಗಮಿಸಿದ್ದಾರೆ. 15 ನಿಮಿಷಗಳ ಕಾಲ ಸಿಎಂ ಜೊತೆ ಮಾತನಾಡಿದ ರೋಷನ್ ಬೇಗ್ ನಂತರ ಮನೆಯಿಂದ ಹೊರ ಬಂದಿದ್ದಾರೆ.

cm bsy roshan baig 1 4 e1574157763964

ಈ ವೇಳೆ ಮಾಧ್ಯಮಗಳು ಪ್ರಶ್ನೆ ಕೇಳಿದ್ದಕ್ಕೆ ರೋಷನ್ ಬೇಗ್ ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದರು. ರೋಷನ್ ಬೇಗ್ ತೆರಳಿದ ಬೆನ್ನಲ್ಲೇ ಬಿಎಸ್‍ವೈ ನಿವಾಸಕ್ಕೆ ಶಿವಾಜಿನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶರವಣ ಆಗಮಿಸಿ ಮಾತುಕತೆ ನಡೆಸಿದ್ದಾರೆ.

ಬಿಜೆಪಿಗೆ ಬೆಂಬಲ:
ಬಿಎಸ್‍ವೈ ಮತ್ತು ರೋಷನ್ ಬೇಗ್ ಇಬ್ಬರು ಏನು ಮಾತನಾಡಿದ್ದೇವೆ ಎನ್ನುವುದನ್ನು ಅಧಿಕೃತವಾಗಿ ತಿಳಿಸಿಲ್ಲ. ಬಿಜೆಪಿಗೆ ನೀವು ಬೆಂಬಲ ನೀಡಿದರೆ ಮುಂದೆ ನಿಮಗೆ ಒಳ್ಳೆಯದಾಗುತ್ತದೆ. ಪಕ್ಷಕ್ಕೆ ಸೇರಿಸಿಕೊಳ್ಳದಿರಲು ಕಾರಣ ನಿಮಗೆ ಗೊತ್ತಿದೆ. ನೀವು ಸಹಕಾರ ಕೊಟ್ಟರೆ ಮುಂದೆ ಒಳ್ಳೆಯದಾಗುತ್ತದೆ ಎಂದು ಬಿಎಸ್‍ವೈ ರೋಷನ್ ಬೇಗ್‍ಗೆ ಹೇಳಿದ್ದಾರೆ. ಸಿಎಂ ಭರವಸೆಗೆ ರೋಷನ್ ಬೇಗ್ ಒಪ್ಪಿಗೆ ನೀಡಿದ್ದು ಶಿವಾಜಿನಗರದಲ್ಲಿ ಬಿಜೆಪಿಗೆ ಬೆಂಬಲ ನೀಡುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

BJP SULLAI 1

ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸಬಹುದು ಎಂದು ಸುಪ್ರೀಂ ಮಹತ್ವದ ತೀರ್ಪು ನೀಡಿದ ಬಳಿಕ 16 ಮಂದಿಯ ಜೊತೆಗೆ ರೋಷನ್ ಬೇಗ್ ಬಿಜೆಪಿ ಸೇರ್ಪಡೆಯಾಗುತ್ತಾರೆ ಎನ್ನುವ ಸುದ್ದಿ ಹೊರ ಬಿದ್ದಿತ್ತು. ಆದರೆ ಬಿಜೆಪಿ ಹೈಕಮಾಂಡ್ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಶಿವಾಜಿನಗರದಿಂದ ಪಕ್ಷೇತರದ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ಸಿದ್ಧತೆ ನಡೆಸಿದ್ದರು. ಆದರೆ ಈಗ ಚುನಾವಣಾ ರಾಜಕೀಯಕ್ಕೆ ಪೂರ್ಣವಿರಾಮ ಹಾಕಲು ಮುಂದಾಗಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ.

ರೋಷನ್ ಬೇಗ್ ಶನಿವಾರ ಆಪ್ತರ ಜೊತೆ ಮಾತನಾಡಿದ್ದು, ಈ ವೇಳೆ ಚುನಾವಣಾ ರಾಜಕೀಯದಿಂದ ಹಿಂದಕ್ಕೆ ಸರಿಯುವ ಮಾತನ್ನು ಆಡಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬೆಂಬಲಿಗರು ಚುನಾವಣೆಗೆ ಸ್ಪರ್ಧಿಸಬೇಕೆಂದು ಒತ್ತಡ ಹೇರಿದಾಗ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ.

cm bsy roshan baig 1 2 e1574157704962

ಹಿಂದೆ ಸರಿದದ್ದು ಯಾಕೆ?
ರೋಷನ್ ಬೇಗ್ 3 ಕಾರಣಗಳಿಂದಾಗಿ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಮೊದಲನೆಯದಾಗಿ ಐಎಂಎ ಪ್ರಕರಣದಲ್ಲಿ ಹೆಸರು ಕೇಳಿ ಬಂದಿದೆ. ಈ ವಿಚಾರದಲ್ಲಿ ಮುಸ್ಲಿಮ್ ಸಮುದಾಯ ಸಹ ಬೇಗ್ ವಿರುದ್ಧ ನಿಂತುಕೊಂಡಿದೆ. ಎರಡನೇಯದಾಗಿ ಬಿಜೆಪಿ ಟಿಕೆಟ್ ಸಿಕ್ಕಿದರೆ ನಿಲ್ಲುವ ಸಾಧ್ಯತೆ ಇತ್ತು. ಆದರೆ ಬಿಜೆಪಿ ಕೊನೆ ಕ್ಷಣದಲ್ಲಿ ಟಿಕೆಟ್ ನೀಡದೇ ಬಿಬಿಎಂಪಿಯ ಮಾಜಿ ಸದಸ್ಯ ಶರವಣ ಅವರಿಗೆ ನೀಡಿದೆ.

ಮೂರನೇಯದಾಗಿ ಪಕ್ಷೇತರ ಅಭ್ಯರ್ಥಿಯಾಗಿ ನಿಂತರೂ ಸದ್ಯದ ಪರಿಸ್ಥಿತಿಯಲ್ಲಿ ಗೆಲ್ಲುವುದು ಕಷ್ಟ. ಈ ಎಲ್ಲ ಕಾರಣದಿಂದ ಚುನಾವಣಾ ರಾಜಕೀಯದಿಂದ ಹಿಂದಕ್ಕೆ ಸರಿದಿದ್ದಾರೆ ಎನ್ನುವ ವಿಶ್ಲೇಷಣೆ ಕೇಳಿ ಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *