ಬೆಂಗಳೂರು: ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ಹಿರಿಯ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ಶಿವಳ್ಳಿ ಸ್ಥಾನವನ್ನು ಅವರಿಗೆ ನೀಡುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ರಂಜಾನ್ ಹಬ್ಬ ಇರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್ ಚಾಮರಾಜಪೇಟೆಯ ಈದ್ಗಾ ಮೈದಾನಕ್ಕೆ ಆಗಮಿಸಿದ್ದರು. ಐದು ಸಾವಿರಕ್ಕೂ ಹೆಚ್ಚು ಮುಸ್ಲಿಂ ಬಾಂಧವರು ಪ್ರಾರ್ಥನೆ ನಡೆಸಿದ್ದು, ಪ್ರಾರ್ಥನೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್ ಪಾಲ್ಗೊಂಡಿದ್ದರು.
ಈ ವೇಳೆ ರಾಮಲಿಂಗಾರೆಡ್ಡಿ ಅವರ ಅಸಮಾಧಾನ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ, ನಾನೇ ರಾಮಲಿಂಗಾರೆಡ್ಡಿ ಅವರ ಜೊತೆ ಮಾತನಾಡುತ್ತೇನೆ. ಪುನಾರಚನೆ ಮಾಡುವಾಗ ರಾಮಲಿಂಗಾರೆಡ್ಡಿ ಅವರಿಗೆ ಮಂತ್ರಿ ಸ್ಥಾನ ನೀಡುವುದಾಗಿ ಹೇಳಲಾಗಿತ್ತು. ಆದರೆ ಈಗ ಪುನಾರಚನೆ ಮಾಡುತ್ತಿಲ್ಲ. ಶಿವಳ್ಳಿ ನಿಧನದಿಂದ ಕಾಂಗ್ರೆಸ್ಸಿನ ಒಂದು ಸ್ಥಾನ ಖಾಲಿ ಇದ್ದು, ಆ ಸ್ಥಾನವನ್ನು ರಾಮಲಿಂಗಾರೆಡ್ಡಿ ಅವರಿಗೆ ನೀಡಲಾಗುತ್ತದೆ ಎಂದು ತಿಳಿಸಿದರು.
ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಸಿಎಂ ಪಟ್ಟ ವಿಚಾರದ ಬಗ್ಗೆ ಮಾತನಾಡಿ, ಖರ್ಗೆ ಅವರು ಮುಖ್ಯಮಂತ್ರಿಯಾಗುವುದು ಬೇಡ ಎಂದು ನಾವು ಹೇಳಲೇ ಇಲ್ಲ. ಖರ್ಗೆ ಸಿಎಂ ಆಗಬೇಕು ಎಂದು ಹೇಳುತ್ತಿದ್ದೇವೆ. 2013ರಲ್ಲಿ ಶಾಸಕರು ಹಾಗೂ ಹೈಕಮಾಂಡ್ ನನಗೆ ಸಿಎಂ ಆಗಿ ಎಂದು ಹೇಳಿದ್ದರು. ಹಾಗಾಗಿ ನಾನು ಸಿಎಂ ಆಗಿದ್ದೆ. ಹಾಗಂತ ಖರ್ಗೆ ಸಿಎಂ ಆಗಬಾರದು, ಪರಮೇಶ್ವರ್ ಸಿಎಂ ಆಗಬಾರದು ಎಂದು ನಾವು ಹೇಳುತ್ತಿಲ್ಲ. ಎಲ್ಲರಿಗೂ ಅವಕಾಶ ಸಿಗಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.