ಶಿವಮೊಗ್ಗ: ವಿಕಲಚೇತನ ಯುವತಿಯೋರ್ವಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ.
ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ ತೀರ್ಥಹಳ್ಳಿ ತಾಲೂಕಿನ ಶಿವರಾಜಪುರದ ಸತೀಶ್ (38) ಎಂದು ಗುರುತಿಸಲಾಗಿದೆ. ಮನೆಯವರೆಲ್ಲಾ ಕೆಲಸಕ್ಕೆಂದು ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಆರೋಪಿ ಸತೀಶ್ ವಿಕಲಚೇತನ ಯುವತಿಯನ್ನು ವೀಲ್ ಚೇರ್ ಗೆ ಕಟ್ಟಿ ಹಾಕಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಆರೋಪಿ ಅತ್ಯಾಚಾರಕ್ಕೆ ಪ್ರಯತ್ನಿಸಿದ್ದರಿಂದ ಯುವತಿ ಜೋರಾಗಿ ಕಿರುಚಾಟ ನಡೆಸಿದ್ದಾಳೆ. ಯುವತಿಯ ಕಿರುಚಾಟ ಕೇಳಿ ಮನೆಯತ್ತ ಧಾವಿಸಿ ಬಂದ ಗ್ರಾಮಸ್ಥರು ಆರೋಪಿಯನ್ನು ಹಿಡಿದು ಕಂಬಕ್ಕೆ ಕಟ್ಟಿ ಹಾಕಿ ಸಖತ್ ಗೂಸ ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ಸತೀಶ್ ತನ್ನ ಪತ್ನಿಯ ಸಹೋದರನ ಮನೆಗೆ ಬಂದಿದ್ದನು. ಈ ವೇಳೆ ಈ ದುಷ್ಕೃತ್ಯ ನಡೆಸಲು ಹೋಗಿ ಸಿಕ್ಕಿ ಬಿದ್ದಿದ್ದಾನೆ.
ಸದ್ಯ ಯುವತಿಯನ್ನು ವೈದ್ಯಕೀಯ ಚಿಕಿತ್ಸೆಗಾಗಿ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.