ಶಿವಮೊಗ್ಗ: ಕೊರೊನಾ ಮಹಾಮಾರಿ ಸೋಂಕು ರೈತರಿಗೂ ಬೆಂಬಿಡದೇ ಕಾಡುತ್ತಿದ್ದು, ತಾವು ಬೆಳೆದ ಬೆಳೆ, ಹಣ್ಣುಗಳನ್ನು ಮಾರಾಟ ಮಾಡಲಾಗದೇ ರೈತರು ಒದ್ದಾಡುತ್ತಿದ್ದಾರೆ. ಈ ವೇಳೆ ಸರ್ಕಾರವೇನಾದರೂ ಸಹಾಯ ಮಾಡಲಿ ಎಂದು ಗೋಗರೆಯುತ್ತಿದ್ದಾರೆ.
ಈ ರೀತಿಯ ಸಂದರ್ಭದಲ್ಲಿ ಹಣ್ಣು ಬೆಳೆದ ಬೆಳೆಗಾರರಿಗೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಬೆಂಬಲವಾಗಿ ನಿಂತಿದ್ದು, ಸುಮಾರು 70 ಸಾವಿರ ಕಲ್ಲಂಗಡಿ ಹಣ್ಣನ್ನು ತಾವೇ ಸ್ವಂತ ಹಣದಿಂದ ಖರೀದಿ ಮಾಡಿದ್ದಾರೆ. ಜೊತೆಗೆ ಇದನ್ನು ಸಾರ್ವಜನಿಕರಿಗೆ ವಿತರಿಸುವ ಕೆಲಸ ಕೂಡ ಮಾಡುತ್ತಿದ್ದಾರೆ.
ಹಣ್ಣು ಬೆಳೆಗಾರರಿಗೆ ನಷ್ಟವುಂಟಾಗಬಾರದು ಎಂಬ ಹಿನ್ನೆಲೆಯಲ್ಲಿ ಸಚಿವರು ತಾವೇ ಖರೀದಿಸಿ, ರೈತರ ಕೈ ಹಿಡಿದಿದ್ದಾರೆ. ಈಗಾಗಲೇ ಶಿವಮೊಗ್ಗ ಜಿಲ್ಲೆಯಲ್ಲಿ ಹಣ್ಣು ಬೆಳೆಗಾರರು ವಿವಿಧ ಹಣ್ಣುಗಳನ್ನು ಬೆಳೆದು ಕೆಲವು ಕಡೆಗಳಲ್ಲಿ ನಾಶ ಮಾಡಿದ್ದರು. ಆದರೆ ಕೆಲವು ಭಾಗದಲ್ಲಿ ಕಲ್ಲಂಗಡಿ ಬೆಳೆದು ಮಾರಾಟ ಮಾಡಲಾಗದೆ, ಸೂಕ್ತ ಬೆಲೆ ಸಿಗದೇ ಕಂಗಾಲಾಗಿದ್ದ ಬೆಳಗಾರರಿಗೆ ಸಚಿವ ಈಶ್ವರಪ್ಪ ಬೆನ್ನೆಲುಬಾಗಿ ನಿಂತಿದ್ದಾರೆ. ವಿವಿಧ ಬೆಳೆಗಾರರಿಂದ ಸುಮಾರು 70 ಸಾವಿರ ಕಲ್ಲಂಗಡಿ ಹಣ್ಣನ್ನು ಖರೀದಿಸಿ ಮಾನವೀಯತೆ ಮೆರೆದಿದ್ದಾರೆ.
ಅದರಂತೆ ಇಂದು ಈ ಹಣ್ಣುಗಳ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಗರದ ಕೋಟೆ ಸೀತಾರಾಮಾಂಜನೇಯ ದೇವಾಲಯದ ಬಳಿ ಹಣ್ಣುಗಳು ತುಂಬಿದ್ದ ವಾಹನಗಳಿಗೆ ಚಾಲನೆ ನೀಡಿದರು. ನಗರದ 35 ವಾರ್ಡ್ ಗಳಿಗೆ ತೆರಳಿ ಅಲ್ಲಿನ ಅರ್ಹ ಬಡವರಿಗೆ ಈ ಹಣ್ಣನ್ನು ಉಚಿತವಾಗಿ ಹಂಚುವ ಕಾರ್ಯವನ್ನು ಇಂದು ಸಚಿವ ಈಶ್ವರಪ್ಪ ಮಾಡುತ್ತಿದ್ದಾರೆ.