ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ವ್ಯಕ್ತಿಯೊಬ್ಬ ಫೋನ್ ಮಾಡಿ ತಮಿಳು ಭಾಷೆಯಲ್ಲಿ ಮಾತನಾಡಿ ಜೀವ ಬೆದರಿಕೆ ಹಾಕಿದ್ದಾನೆ.
ಸಂವಿಧಾನದ ವಿಧಿ 370, ಪೌರತ್ವ ತಿದ್ದುಪಡೆ ಕಾಯ್ದೆ ಬಗ್ಗೆ ಮತ್ತು ಮುಸ್ಲಿಮರ ವಿರುದ್ಧ ಮಾತನಾಡಿದರೆ ಸರಿ ಇರುವುದಿಲ್ಲ ಎಂದು ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ಹಾಕಿದ್ದಾನೆ. ಕರೆ ಬಂದಿರುವ ಬಗ್ಗೆ ಕೆ.ಎಸ್ ಈಶ್ವರಪ್ಪ ಅವರು ಶಿವಮೊಗ್ಗ ಎಸ್ಪಿಗೆ ಮಾಹಿತಿ ನೀಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.
ಸಚಿವರಿಗೆ ಶುಕ್ರವಾರ ಮಧ್ಯಾಹ್ನ ವ್ಯಕ್ತಿಯೊಬ್ಬ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಪರಿಶೀಲನೆ ನಡೆಸಿ, ತನಿಖೆ ಆರಂಭಿಸುತ್ತೇವೆ ಎಂದು ಶಿವಮೊಗ್ಗ ಎಸ್ಪಿ ಕೆ.ಎಂ.ಶಾಂತರಾಜು ಅವರು ಸಚಿವರಿಗೆ ಭರವಸೆ ನೀಡಿದ್ದಾರೆ. ಈ ಸಂಬಂಧ ಕೆ.ಎಸ್.ಈಶ್ವರಪ್ಪ ಅವರು ಎಸ್ಪಿ ಅವರಿಗೆ ಶನಿವಾರ ಅಥವಾ ಭಾನುವಾರ ಲಿಖಿತ ದೂರು ನೀಡುವ ಸಾಧ್ಯತೆ ಇದೆ ಎಂದು ಸಚಿವರ ಆಪ್ತರೊಬ್ಬರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.
ಈ ಹಿಂದೆಯೂ ದುಬೈ ಮೂಲದ ವ್ಯಕ್ತಿಯಿಂದ ಕೆ.ಎಸ್.ಈಶ್ವರಪ್ಪ ಅವರಿಗೆ ಜೀವ ಬೆದರಿಕೆ ಕರೆ ಬಂದಿತ್ತು. ಆ ಸಂದರ್ಭದಲ್ಲೂ ಸಚಿವರು ಎಸ್ಪಿ ಅವರಿಗೆ ದೂರು ನೀಡಿದ್ದರು.