ಶಿವಮೊಗ್ಗ: ಸಕಾಲಕ್ಕೆ ವೇತನ ನೀಡುವಂತೆ ಹಾಗೂ ಸೇವಾ ಭದ್ರತೆ ಒದಗಿಸುವಂತೆ ಆಗ್ರಹಿಸಿ ಶಿವಮೊಗ್ಗದಲ್ಲಿ ಇಂದು ಮೆಗ್ಗಾನ್ ಆಸ್ಪತ್ರೆಯ ಹೊರಗುತ್ತಿಗೆಯ ನೂರಾರು ಸಿಬ್ಬಂದಿ ಪ್ರತಿಭಟನೆ ನಡೆಸಿದರು.
ಕರ್ತವ್ಯಕ್ಕೆ ಗೈರು ಹಾಜರಾಗಿ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದ ಸಿಬ್ಬಂದಿಯವರು ನಮಗೆ ಸಮಯಕ್ಕೆ ಸರಿಯಾಗಿ ವೇತನ ನೀಡುತ್ತಿಲ್ಲ ಹಾಗೂ ಕೆಲಸದಿಂದ ತೆಗೆಯುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ ಎಂದು ಆರೋಪಿಸಿದರು.
ಅಲ್ಲದೇ ಹಲವು ವರ್ಷದಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ನಮ್ಮನ್ನೆ ಖಾಯಂಗೊಳಿಸಬೇಕು ಇಲ್ಲದಿದ್ದರೆ ಹೊರಗುತ್ತಿಗೆ ತೆಗೆದು ಹಾಕಿ ಸರ್ಕಾರವೇ ನೇರ ನೇಮಕಾತಿ ಮಾಡಿಕೊಳ್ಳಬೇಕು ಎಂದು ಸಿಬ್ಬಂದಿ ಆಗ್ರಹಿಸಿದರು.
ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿದ್ದ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ರಾಜ್ಯದಲ್ಲಿ ಹೊರ ಗುತ್ತಿಗೆಯದ್ದು ಒಂದು ದೊಡ್ಡ ಮಾಫಿಯವೇ ಇದೆ. ಸರ್ಕಾರವೇ ವೇತನ ನೀಡುತ್ತಿರಬೇಕಾದರೆ ಹೊರಗುತ್ತಿಗೆ ಏಕೆ ಬೇಕು ಎಂದು ಪ್ರಶ್ನಿಸಿದರು. ಈ ಬಗ್ಗೆ ಮುಖ್ಯಮಂತ್ರಿ ಅವರ ಜೊತೆ ಚರ್ಚಿಸಿ ಹೊರಗುತ್ತಿಗೆ ತೆಗೆದುಹಾಕಿ ನೇರ ನೇಮಕಾತಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡುವುದಾಗಿ ತಿಳಿಸಿದರು.