ಶಿವಮೊಗ್ಗ: ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಅವರನ್ನು ವಜಾ ಮಾಡುವಂತೆ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಕೊರೊನಾದಿಂದಾಗಿ ಇಡೀ ರಾಷ್ಟ್ರ ತತ್ತರಿಸಿ ಹೋಗಿದೆ. ಇಂತಹ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ತಮ್ಮ ಮಕ್ಕಳೊಂದಿಗೆ ಸ್ವಿಮ್ಮಿಂಗ್ ಮಾಡುವ ಮೂಲಕ ಕೊರೊನಾ ನಿಯಮ ಗಾಳಿಗೆ ತೂರಿದ್ದಾರೆ. ಹೀಗಾಗಿ ಸಚಿವ ಸ್ಥಾನದಿಂದ ಕೂಡಲೇ ವಜಾ ಮಾಡುವಂತೆ ಶಿವಮೊಗ್ಗದಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದ ಕಾರ್ಯಕರ್ತರು, ಅಪರ ಜಿಲ್ಲಾಧಿಕಾರಿ ಅವರ ಮೂಲಕ ಸಚಿವ ಸುಧಾಕರ್ ಅವರನ್ನು ವಜಾ ಮಾಡುವಂತೆ ಆಗ್ರಹಿಸಿ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದರು. ಮುಖ್ಯಮಂತ್ರಿ ಅವರು ಈ ಬಗ್ಗೆ ಗಮನ ಹರಿಸಿ ಕೊರೊನಾ ಸಮಯದಲ್ಲಿ ಜವಬ್ದಾರಿ ಇಲ್ಲದಂತೆ ನಡೆದುಕೊಂಡಿರುವ ಸಚಿವ ಸುಧಾಕರ್ ಅವರನ್ನು ತಕ್ಷಣವೇ ವಜಾಗೊಳಿಸುವಂತೆ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ.