ಕೆಜಿಎಫ್ 2 ಚಿತ್ರ ವೀಕ್ಷಣೆ ವೇಳೆ ಶೂಟೌಟ್ ಪ್ರಕರಣ – ತಿಂಗಳ ಬಳಿಕ ಆರೋಪಿ ಅರೆಸ್ಟ್

Public TV
2 Min Read
haveri shootout

ಹಾವೇರಿ: ಸಿಎಂ ತವರು ಕ್ಷೇತ್ರದಲ್ಲಿ ನಡೆದಿದ್ದ ಶೂಟೌಟ್ ಪ್ರಕರಣ ಇಡೀ ಜಿಲ್ಲೆಯ ಜನರನ್ನು ಬೆಚ್ಚಿ ಬೀಳಿಸಿತ್ತು. ಕೆಜಿಎಫ್ 2 ಚಿತ್ರ ವೀಕ್ಷಣೆ ವೇಳೆ ಅಲ್ಲಿ ಗುಂಡಿನ ಸದ್ದು ಮೊಳಗಿತ್ತು. ಪ್ರಕರಣದ ಆರೋಪಿಯನ್ನು ಬಂಧಿಸುವುದು ಪೊಲೀಸರಿಗೂ ದೊಡ್ಡ ತಲೆನೋವಾಗಿತ್ತು. ಒಂದು ತಿಂಗಳ ಕಾಲ ಕಾರ್ಯಾಚರಣೆ ನಡೆಸಿದ ಪೊಲೀಸರು ಚಿತ್ರಮಂದಿರದಲ್ಲಿ ಫೈರಿಂಗ್ ಮಾಡಿದ್ದ ಆರೋಪಿಯನ್ನು ಕೊನೆಗೂ ಬಂಧಿಸಿ ಜೈಲಿಗಟ್ಟಿದ್ದಾರೆ.

ಅದು ಏಪ್ರಿಲ್ 19, ಸಮಯ ರಾತ್ರಿ ಸುಮಾರು 10 ಗಂಟೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ರಾಜಶ್ರೀ ಚಿತ್ರಮಂದಿರದಲ್ಲಿದ್ದ ಜನರೆಲ್ಲ ಕೆಜಿಎಫ್ 2 ಚಿತ್ರ ವೀಕ್ಷಣೆ ಮಾಡುತ್ತಿದ್ದರು. ಚಿತ್ರ ಆರಂಭವಾಗಿ ಕೆಲವೇ ನಿಮಿಷಗಳಲ್ಲಿ ಗುಂಡಿನ ಸದ್ದು ಕೇಳಿಸಿತ್ತು. ತಾಲೂಕಿನ ಮುಗಳಿ ಗ್ರಾಮದ ವಸಂತ್ ಕುಮಾರ್ ಮೇಲೆ ಗುಂಡು ಹಾರಿಸಲಾಗಿತ್ತು. ಗುಂಡಿನ ದಾಳಿಗೆ ಒಳಗಾಗಿದ್ದ ಯುವಕ ರಕ್ತಸಿಕ್ತವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ.

haveri shootout 1

ತಕ್ಷಣವೇ ಗಾಯಾಳಿಗೆ ಶಿಗ್ಗಾಂವಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗಲೂ ವಸಂತ್ ಕುಮಾರ್ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದ ಪೊಲೀಸರು ಆರೋಪಿ ಪತ್ತೆಗಾಗಿ ತನಿಖೆಗೆ ಇಳಿದಿದ್ದರು.

ಚಿತ್ರಮಂದಿರದಲ್ಲಿ ಕತ್ತಲು ಕಳೆದು ಬೆಳಕು ಹಚ್ಚುವುದರೊಳಗೆ ಗುಂಡು ಹಾರಿಸಿದ್ದ ಆರೋಪಿ ಅಲ್ಲಿಂದ ಕಾಲ್ಕಿತ್ತಿದ್ದ. ಹೀಗಾಗಿ ಆರೋಪಿಯನ್ನು ಗುರುತಿಸುವುದು ಅಷ್ಟು ಸುಲಭದ ಕೆಲಸ ಆಗಿರಲಿಲ್ಲ. ಆದರೂ ತನಿಖೆಗೆ ಇಳಿದಿದ್ದ ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಶಿಗ್ಗಾಂವಿ ಪಟ್ಟಣದ ನಿವಾಸಿ ಮಂಜುನಾಥ್ ಅಲಿಯಾಸ್ ಸಂತೋಷ್ ಅಲಿಯಾಸ್ ಮಲ್ಲಿಕ್ ಪಾಟೀಲ್ ಎಂದು ಗುರುತು ಪತ್ತೆ ಮಾಡಿದರು. ಆದರೆ ಆರೋಪಿ ಮಾತ್ರ ಪೊಲೀಸರ ಕೈಗೆ ಸಿಗದಂತೆ ಗೋವಾ, ಮಹಾರಾಷ್ಟ್ರ ಎಂಬಂತೆ ಅಲ್ಲಿ ಇಲ್ಲಿ ಓಡಾಡಿಕೊಂಡಿದ್ದ. ಆರೋಪಿಯ ಹೆಡೆಮುರಿ ಕಟ್ಟಲೇಬೇಕು ಎಂದು ಆತನ ಬೆನ್ನು ಬಿದ್ದಿದ್ದ ಪೊಲೀಸರು ಒಂದು ತಿಂಗಳ ಕಾಲ ಕಾರ್ಯಾಚರಣೆ ನಡೆಸಿ, ಕೊನೆಗೂ ಆತನನ್ನು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಸನ್ನಿ ಲಿಯೋನ್: ಮಂಡ್ಯ ಫ್ಯಾನ್ಸ್ ಪ್ರೀತಿಗೆ ಧನ್ಯವಾದ ತಿಳಿಸಿದ ಸನ್ನಿ

haveri shootout

ಒಂದು ತಿಂಗಳ ಕಾಲ ಕಾರ್ಯಾಚರಣೆ ನಡೆಸಿದ ಪೊಲೀಸರು ಗುರುವಾರ(ಮೇ 19) ಬೆಳ್ಳಂಬೆಳಗ್ಗೆ ಕಾರವಾರ ಜಿಲ್ಲೆ ಮುಂಡಗೋಡ ಬಸ್ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ ಒಂದು ಗನ್, ಹದಿನೈದು ಜೀವಂತ ಗುಂಡುಗಳು, ಎರಡು ಖಾಲಿ ಕೋಕಾ, ಒಂದು ಸ್ಕೂಟಿ ಹಾಗೂ ಒಂದು ಮೊಬೈಲ್ ಜಪ್ತಿ ಮಾಡಿದ್ದಾರೆ. ಘಟನೆ ಬಳಿಕ ಮಂಜುನಾಥ್‌ಗೆ ಪರಾರಿಯಾಗಲು ನೆರವು ನೀಡಿದ್ದ ಬಂಕಾಪುರ ಪಟ್ಟಣದ ನಿವಾಸಿ ಇಸ್ಮಾಯಿಲ್ ಎಂಬಾತನನ್ನೂ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ತ್ರಿಶೂಲ ದೀಕ್ಷೆ, ತರಬೇತಿ ಪ್ರಕರಣ – ಸಾಯಿ ಶಂಕರ ವಿದ್ಯಾ ಸಂಸ್ಥೆಯಿಂದ ಟಿಸಿ ಪಡೆದ ಮೂವರು ಮುಸ್ಲಿಂ ವಿದ್ಯಾರ್ಥಿಗಳು

haveri shootout 2

ಚಿತ್ರಮಂದಿರದಲ್ಲಿ ಗಾಯಗೊಂಡಿದ್ದ ವಸಂತ್ ಕುಮಾರ್ ಹಾಗೂ ಆತನ ಸ್ನೇಹಿತರು ಚಿತ್ರವೀಕ್ಷಣೆ ವೇಳೆ ಅವರು ಕುಳಿತಿದ್ದ ಮುಂದಿನ ಸೀಟು ಖಾಲಿ ಇತ್ತು. ಖಾಲಿ ಸೀಟಿನ ಮೇಲೆ ಕಾಲಿಟ್ಟು ಕುಳಿತಿದ್ದ ಅವರಿಗೆ ಆರೋಪಿ ಮಂಜುನಾಥ್ ತಾಕೀತು ಮಾಡಿದ್ದ. ಆಗ ಮಾತಿಗೆ ಮಾತು ಬೆಳೆದಿತ್ತು. ಬಳಿಕ ಆರೋಪಿ ಮಂಜುನಾಥ್ ಕೆಲವು ನಿಮಿಷಗಳ ಕಾಲ ಚಿತ್ರಮಂದಿರದಿಂದ ಹೊರಗೆ ಹೋಗಿ ಮತ್ತೆ ಒಳಗೆ ಬಂದು ವಸಂತ್ ಕುಮಾರ್ ಮೇಲೆ ಗುಂಡು ಹಾರಿಸಿ ಪರಾಯಾಗಿದ್ದ. ಘಟನೆಯಲ್ಲಿ ವಸಂತ್ ಕುಮಾರ್ ಹೊಟ್ಟೆ ಮತ್ತು ಕಾಲಿಗೆ ಗುಂಡು ತಗುಲಿ ಗಾಯಗಳಾಗಿದ್ದವು. ಶೂಟೌಟ್ ಪ್ರಕರಣದ ಆರೋಪಿ ಬಂಧನದಿಂದ ಶಿಗ್ಗಾಂವಿ ಪಟ್ಟಣ ಹಾಗೂ ಜಿಲ್ಲೆಯ ಜನರು ನಿಟ್ಟುಸಿರು ಬಿಡುವಂತಾಗಿದೆ.

Share This Article
Leave a Comment

Leave a Reply

Your email address will not be published. Required fields are marked *