– ಆರೋಪಿಗಳಿಗಾಗಿ ಪೊಲೀಸರ ಹುಡುಕಾಟ
ಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಸಮೀಪದ ಮುದರಂಗಡಿಯಲ್ಲಿ ನಡೆದ ಗುಂಡಿನ ದಾಳಿ ಜಿಲ್ಲೆಯ ಜನರನ್ನ ಬೆಚ್ಚಿಬೀಳಿಸಿದೆ. ಮುದರಂಗಡಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ, ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ (Congress Leader) ಡೇವಿಡ್ ಡಿಸೋಜಾ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಡಿಸೋಜಾ ಮೃತಪಟ್ಟಿದ್ದಾರೆ. ಪ್ರಕರಣದ ಹಿಂದಿನ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ.
ಮಾಹಿತಿಯ ಪ್ರಕಾರ, ಡೇವಿಡ್ ಡಿಸೋಜಾ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ (Firing) ನಡೆಸಿದ ಬಳಿಕ ಅವರನ್ನು ತಕ್ಷಣವೇ ಶಿರ್ವದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು. ವೈದ್ಯರು ದೇಹದಲ್ಲಿ ಸಿಲುಕಿದ್ದ ಗುಂಡನ್ನು ಹೊರತೆಗೆದ ನಂತರ ಹೆಚ್ಚಿನ ಚಿಕಿತ್ಸೆಗೆ ಉಡುಪಿ ಖಾಸಗಿ ಆಸ್ಪತ್ರೆಗೆ (Udupi Private Hospital) ಕರೆದೊಯ್ಯಲಾಗುತ್ತಿತ್ತು. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.


ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವೈಯಕ್ತಿಕ ದ್ವೇಷ ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿರುವ ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಡೇವಿಡ್ ಡಿಸೋಜಾ ಶಿರ್ವ ಭಾಗದಲ್ಲಿ ಕಾಂಗ್ರೆಸ್ ಮುಖಂಡರಾಗಿ ಗುರುತಿಸಿಕೊಂಡಿದ್ದು, ಬಸ್ ಉದ್ಯಮ ಸೇರಿದಂತೆ ಹಲವು ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದರು. ಈ ಹಿಂದೆ ಶಿರ್ವ ಚರ್ಚಿನ ಧರ್ಮಗುರು ಆತ್ಮಹತ್ಯೆ ಪ್ರಕರಣದಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಬಂಧನಕ್ಕೂ ಒಳಗಾಗಿದ್ದರು. ಹಲವು ವಿವಾದಗಳ ಮೂಲಕವೂ ಅವರು ಸುದ್ದಿಯಾಗಿದ್ದರು.

ಸದ್ಯ ಡಿಸೋಜಾ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಸೇರಿದಂತೆ ಹಲವು ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ನಡೆದಿರುವ ಈ ಶೂಟೌಟ್ ಪ್ರಕರಣ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಪ್ರಕರಣದ ಹಿಂದಿನ ನಿಖರ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಆರೋಪಿಗಳ ಬಂಧನಕ್ಕಾಗಿ ವ್ಯಾಪಕ ಶೋಧ ಕಾರ್ಯ ಮುಂದುವರಿಸಿದ್ದಾರೆ.

