ಚಾಮರಾಜನಗರ: ನಡೆದಾಡುವ ದೇವರು ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳು ಹತ್ತು ವರ್ಷಗಳ ಹಿಂದೆ ಚಾಮರಾಜನಗರಕ್ಕೆ ಭೇಟಿ ನೀಡಿದ್ದರು.
ಇಲ್ಲಿನ ನಿಜಗುಣ ರಾಜು ಮನೆಗೆ ಪೂಜೆಗೆಂದು ಬಂದಿದ್ದ ಶ್ರೀಗಳು ಪೂಜೆಯ ನಂತರ ತಮ್ಮ ಪಾದುಕೆಗಳನ್ನು ಬಿಟ್ಟು ಹೋಗಿದ್ದಾರೆ. ಅಂದಿನಿಂದಲೂ ಈ ಭಕ್ತರ ಮನೆಯಲ್ಲಿ ಶ್ರೀಗಳ ಪಾದುಕೆಗೂ ನಿತ್ಯ ಪೂಜೆ ನಡೆಯುತ್ತಿದೆ. ಅಂದು 101 ವರ್ಷಗಳಾಗಿದ್ದರೂ ದೂರದ ತುಮಕೂರಿನಿಂದ ಚಾಮರಾಜನಗರದವರೆಗೂ ಕಾರಿನಲ್ಲಿ ಬಂದಿದ್ದರು.
ಬೆಳಗ್ಗೆಯಿಂದ ಸಂಜೆಯವರೆಗೂ ಇಲ್ಲಿಯೇ ಇದ್ದು ಭಕ್ತರಿಗೆ ದರ್ಶನ ಭಾಗ್ಯ ನೀಡಿದ್ದ ಡಾ. ಶಿವಕುಮಾರ ಸ್ವಾಮಿಗಳು ಎಲ್ಲರನ್ನು ಲವಲವಿಕೆಯಿಂದಲೇ ಮಾತನಾಡಿಸಿದ್ದರು. ಈ ಪಾದುಕೆಗಳನ್ನು ತಮ್ಮ ಮನೆಯಲ್ಲಿ ಬಿಟ್ಟು ಹೋದ ನಂತರ ತಮಗೆ ಎಲ್ಲಾ ರೀತಿಯ ಅನುಕೂಲಗಳು ಉಂಟಾಗಿವೆ. ಶ್ರೀಗಳ ಪಾದುಕೆಗಳೇ ತಮಗೆ ಶ್ರೀರಕ್ಷೆಯಾಗಿವೆ ಎನ್ನುವ ಅವರು ಪ್ರತಿನಿತ್ಯ ಈ ಪಾದುಕೆಗಳನ್ನು ಪೂಜಿಸಿದ ನಂತರವಷ್ಟೇ ತಮ್ಮ ಇತರ ಕೆಲಸಗಳನ್ನು ಆರಂಭಿಸುತ್ತೇವೆ ಎನ್ನುತ್ತಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ(111) ಇಂದು ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ ದರ್ಶನ ಪಡೆಯಲು ಭಕ್ತರು ಕಾಯುತ್ತಿದ್ದಾರೆ. ಸಿದ್ದಗಂಗಾ ಮಠದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕರು ಶಾಂತಿಯಿಂದ ಇರಬೇಕು ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv