ತುಮಕೂರು: ಶಿವೈಕ್ಯರಾದ ಶಿವಕುಮಾರ ಶ್ರೀಗಳ 11ನೇ ದಿನದ ಪುಣ್ಯಾರಾಧನೆ ಕಾರ್ಯಕ್ರಮದ ಯಶಸ್ಸನ್ನು, ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿಯವರು ಮಠದ ವಿದ್ಯಾರ್ಥಿಗಳು, ಸಿಬ್ಬಂದಿ ಹಾಗೂ ಭಕ್ತಾದಿಗಳಿಗೆ ಅರ್ಪಿಸಿದ್ದಾರೆ.
ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿದ ಜಿಲ್ಲಾಡಳಿತ ಸೇರಿದಂತೆ ಎಲ್ಲಾ ವರ್ಗದ ಜನರಿಗೂ ಶ್ರಿಗಳು ಧನ್ಯವಾದ ಅರ್ಪಿಸಿದ್ದಾರೆ. ಯಾವುದೇ ಗೊಂದಲ, ಸಮಸ್ಯೆ ಇಲ್ಲದೆ ಸುಸೂತ್ರವಾಗಿ ಕಾರ್ಯಕ್ರಮ ನಡೆದಿರುವುದಕ್ಕೆ ಶ್ರೀಗಳು ಸಂತಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕಿರಿಯ ಸ್ವಾಮೀಜಿ ಮಾಧ್ಯಮಗಳೊಂದಿಗೆ ಮಾತನಾಡಿ, ಪುಣ್ಯಾರಾಧನೆಯ ಕಾರ್ಯಕ್ರಮ ಬಹಳ ಅರ್ಥಪೂರ್ಣವಾಗಿ ಯಶಸ್ವಿಯಾಗಿ ನಡೆದಿದೆ. ನಾನು ಈ ಯಶಸ್ಸನ್ನು ಮಕ್ಕಳಿಗೆ, ಸಿಬ್ಬಂದಿಗೆ, ಭಕ್ತರಿಗೆ, ಸರ್ಕಾರ, ಇಲಾಖೆ, ಜಿಲ್ಲಾಡಳಿತ ಹಾಗೂ ಕೊಡುಗೆ ನೀಡಿದವರಿಗೆ ಅರ್ಪಿಸುತ್ತೇನೆ. ಅವರ ಶ್ರಮದ ಫಲವಾಗಿ ಪುಣ್ಯಾರಾಧನೆ ಯಶಸ್ವಿ ಆಗಿದೆ. ಪೂಜ್ಯರ ಮೇಲಿದ್ದ ಭಕ್ತಿಯನ್ನು ಆ ಸಂದರ್ಭದಲ್ಲಿ ನೋಡಲು ಸಾಧ್ಯವಿಲ್ಲ. ಶ್ರೀಸಾಮಾನ್ಯನಿಂದ ಗಣ್ಯ ವ್ಯಕ್ತಿಗಳವರೆಗೂ ಸಮಾನವಾದ ಭಕ್ತಿಯಿತ್ತು. ಇಲ್ಲಿ ಎಲ್ಲರೂ ಸಮಾನವಾಗಿ ಭಾಗಿಯಾಗುವ ಮೂಲಕ ಕಾರ್ಯಕ್ರಮ ಯಶಸ್ವಿ ಮಾಡಿದ್ದಾರೆ ಎಂದರು.
ಈ ಕಾರ್ಯಕ್ರಮವನ್ನು ಅನೇಕ ಪಟ್ಟಣಗಳಲ್ಲಿ, ಹಳ್ಳಿಗಳಲ್ಲಿ, ಸಂಘ-ಸಂಸ್ಥೆಗಳಲ್ಲಿ, ಮಾಧ್ಯಮದವರು ಕೂಡ ತಮ್ಮ ಸೆಂಟರ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಕನ್ನಡ ನಾಡಿನಲ್ಲಿ ಮಾತ್ರವಲ್ಲ ನಾಳೆ ಆಸ್ಟ್ರೇಲಿಯಾದಲ್ಲೂ ಕೂಡ ಪುಣ್ಯರಾಧನೆ ಮಾಡುತ್ತಿದ್ದಾರೆ. ಅವರು ವಿಡಿಯೋ ಕಾಲ್ ಮೂಲಕ ಮಾತನಾಡಬೇಕು ಎಂದು ಕೇಳುತ್ತಿದ್ದಾರೆ. ಅದು ಅವರ ದೊಡ್ಡ ವ್ಯಕ್ತಿತ್ವ. ಈ ಕಾರ್ಯಕ್ರಮದಲ್ಲಿ ಕೆಲಸ ಮಾಡಿದ ಎಲ್ಲರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ ಎಂದರು.
ಇದೇ ವೇಳೆ ಶಿವೈಕ್ಯ ಶಿವಕುಮಾರ ಶ್ರೀಗಳ ಕಂಚಿನ ಪುತ್ಥಳಿ ಬಗ್ಗೆ ಮಾತನಾಡಿದ ಅವರು, ಶ್ರೀಗಳ ಕಂಚಿನ ಪುತ್ಥಳಿ ಉದ್ಯಾನವನದ ಪಕ್ಕದಲ್ಲಿ ಪ್ರತಿಷ್ಠಾಪನೆ ಮಾಡಲು ತಯಾರಿ ನಡೆಯುತ್ತಿದೆ. ಏಪ್ರಿಲ್ 1ರ ಶಿವಕುಮಾರ ಶ್ರೀಗಳ ಜನ್ಮ ದಿನದ ಮುಂಚಿತವಾಗಿಯೇ ಪ್ರತಿಮೆ ಪ್ರತಿಷ್ಠಾಪನೆ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಸಿದ್ದಲಿಂಗ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv